ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಾಜಿ ದೇವದಾಸಿಯರ, ಲೈಂಗಿಕ ವೃತ್ತಿನಿರತ ಮಹಿಳೆಯರ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರ ಮಕ್ಕಳ ಹಕ್ಕುಗಳು ಉಲ್ಲಂಘನೆಯಾಗದಂತೆ ನೀತಿಯನ್ನು ರೂಪಿಸಬೇಕು ಎಂದು ಲಿಂಗತ್ವ ಅಲ್ಪಸಂಖ್ಯಾತರ ಪರ ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ ಹೇಳಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಾಜಿ ದೇವದಾಸಿಯರ, ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರ ಮಕ್ಕಳ ತಂದೆಯ ಹೆಸರನ್ನು ಕೇಳದಂತೆ ನಿಯಮ ರೂಪಿಸಬೇಕು. ಸಂವಿಧಾನ ಬದ್ಧವಾಗಿ ನಾವು ಪಡೆದುಕೊಳ್ಳಬೇಕಾದ ಶಿಕ್ಷಣ, ಉದ್ಯೋಗ, ಮೀಸಲಾತಿ, ಆರೋಗ್ಯ, ಮತದಾರರ ಚೀಟಿ, ಆಧಾರ್ ಕಾರ್ಡ್ ಹಾಗೂ ಇನ್ನಿತರ ಸರ್ಕಾರಿ ದಾಖಲೆಗಳಲ್ಲಿ ತಂದೆಯ ಹೆಸರನ್ನು ನಮೂದಿಸಬೇಕೆಂಬ ನಿಯಮವನ್ನು ಕೈಬಿಡಬೇಕು’ ಎಂದು ಒತ್ತಾಯಿಸಿದರು.
‘ಪಾಸ್ಪೋರ್ಟ್ ಕಚೇರಿ, ಸರ್ಕಾರಿ ಆಸ್ಪತ್ರೆ ಹಾಗೂ ಶಾಲಾ–ಕಾಲೇಜುಗಳಲ್ಲಿ ಪ್ರತ್ಯೇಕವಾದ ಕೊಠಡಿಗಳು ನಿರ್ಮಿಸಬೇಕು. ಸರ್ಕಾರ ಹಾಗೂ ಖಾಸಗಿ ಕ್ಷೇತ್ರಗಳಲ್ಲಿ ಯಾವುದೇ ರೀತಿಯ ತಾರತಮ್ಯ ನೀತಿಗಳು ಆಗದಂತೆ ನೀತಿ ರೂಪಿಸಬೇಕು. ನಮ್ಮ ಸಮುದಾಯದ ಮಕ್ಕಳ ವಿಚಾರದಲ್ಲಿ ಅಸಡ್ಡೆ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು. ಲಿಂಗತ್ವ ಅಲ್ಪಸಂಖ್ಯಾತ ಹಾಗೂ ದೇವದಾಸಿ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ಸಾಂಸ್ಕೃತಿಕವಾಗಿ ಸರ್ಕಾರ ಜಾಗೃತಿ ಮೂಡಿಸಬೇಕು’ ಎಂದು ಆಗ್ರಹಿಸಿದರು.
‘ನಮ್ಮ ಸಮುದಾಯದ ಮಕ್ಕಳ ಶ್ರೇಯೋಭಿವೃದ್ಧಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ, ಮೂರು ತಿಂಗಳಿಗೊಮ್ಮೆ ಪ್ರಗತಿ ಪರಿಶೀಲನಾ ಸಭೆಗಳನ್ನು ನಡೆಸಬೇಕು. ಮಕ್ಕಳನ್ನು ಶಾಲೆಗೆ ದಾಖಲಾತಿ ಮಾಡುವ ಸಂದರ್ಭದಲ್ಲಿ ಮಗುವಿನ ತಾಯಿ ನೀಡುವ ದಾಖಲೆಗಳನ್ನು ಪರಗಣಿಸಿ, ದಾಖಲಾತಿ ಪ್ರಕ್ರಿಯೆ ನಡೆಸಬೇಕು. ಇದಕ್ಕಾಗಿ ವಿಶೇಷ ನೀತಿಯೊಂದನ್ನು ರೂಪಿಸಬೇಕು. ನಮ್ಮ ಸಮುದಾಯದ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶೈಕ್ಷಣಿಕ ಹಾಗೂ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಬೇಕು’ ಎಂದು ಹೇಳಿದರು.
‘ನಾವು ಸ್ವಉದ್ಯೋಗ ನಡೆಸಲು ಪ್ರೋತ್ಸಾಹಿಸುವುದಕ್ಕೆ ಸರ್ಕಾರ ₹10 ಲಕ್ಷ ಪ್ರೋತ್ಸಾಹ ಧನ ನೀಡಬೇಕು. ನಮ್ಮ ಸಮುದಾಯದವರಿಗೆ ನಿವೇಶನಗಳನ್ನು ಮಂಜೂರ ಮಾಡಬೇಕು’ ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.