ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಹೆಚ್ಚುತ್ತಿರುವುದರಿಂದ, ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರ ಕೂಡಾ ಸರ್ಕಾರಿ ಕಚೇರಿಗಳಲ್ಲಿ ನೌಕರರ ಹಾಜರಾತಿಗೆ ಪಾಳಿ ಪದ್ಧತಿ ಅನುಸರಿಸಬೇಕು ಎಂದು ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಸಲ್ಲಿಸಿದೆ.
ಸಚಿವಾಲಯದ ಉಪ ಕಾರ್ಯದರ್ಶಿ ಮತ್ತು ಅಧೀನ ಕಾರ್ಯದರ್ಶಿ ಹಂತದ ಅಧಿಕಾರಿಗಳು ಶೇ 50ರಷ್ಟು ಹಾಗೂ ಇತರ ಎಲ್ಲ ಹಂತದ ಅಧಿಕಾರಿ, ನೌಕರರು ಶೇ 33ರಷ್ಟು ಕಚೇರಿಗೆಸರದಿ ಆಧಾರದಲ್ಲಿ ಹಾಜರಾಗಲು ಅವಕಾಶ ಕಲ್ಪಿಸಬೇಕು. ಗರ್ಭಿಣಿ ನೌಕರರಿಗೆ ಮತ್ತು 55 ವರ್ಷ ದಾಟಿದ, ಅನಾರೋಗ್ಯದಿಂದ ಬಳಲುತ್ತಿರುವ ನೌಕರರಿಗೆ ಹಾಜರಾತಿಯಿಂದ ವಿನಾಯಿತಿ ನೀಡಿ ಮನೆಯಿಂದಲೇ ಕರ್ತವ್ಯ ನಿರ್ವಹಿಸಲು ಅವಕಾಶ ಮಾಡಿಕೊಡಬೇಕು’ ಎಂದು ಮನವಿ ಪತ್ರದಲ್ಲಿ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಕೋರಿದ್ದಾರೆ.
‘ಕೇಂದ್ರ ಸರ್ಕಾರ ತನ್ನ ನೌಕರರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ಕಚೇರಿ ನಿರ್ವಹಣೆ ಸಂದರ್ಭದಲ್ಲಿ ಅಧಿಕಾರಿಗಳು, ನೌಕರರು ಪಾಳಿ ಪದ್ಧತಿ ಅನುಸರಿಸುವಂತೆ ಏ. 13ರಂದೇ ಆದೇಶ ಹೊರಡಿಸಿದೆ. ಅದೇ ರೀತಿ ರಾಜ್ಯ ಸರ್ಕಾರ ಕೂಡಾ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.