ಬಂಧನ
(ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ಕೆಲಸಕ್ಕಿದ್ದ ಮನೆಯಲ್ಲಿ ಚಿನ್ನ ಹಾಗೂ ವಜ್ರದ ಆಭರಣ ಕಳ್ಳತನ ಮಾಡಿದ್ದ ಹೌಸ್ಕೀಪಿಂಗ್ ಕಾರ್ಮಿಕ ಸಚಿನ್ ಸೊನಕರ (24) ಎಂಬಾತನನ್ನು ಜೆ.ಸಿ.ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯ ನಂದನಗರದ ನೇವಾಡಾ ಗ್ರಾಮದ ಆರೋಪಿ ಸಚಿನ್, ಮಿಲ್ಲರ್ ರಸ್ತೆಯ ನಿವಾಸಿಯೊಬ್ಬರ ಮನೆಯಲ್ಲಿ ಹೌಸ್ಕೀಪಿಂಗ್ ಕೆಲಸ ಮಾಡುತ್ತಿದ್ದ. ಜೂನ್ 15ರಂದು 236 ಗ್ರಾಂ ಆಭರಣವನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದ.
ಸೆ.23ರಂದು ಮನೆಯ ಮಾಲೀಕರು ದೂರು ನೀಡಿದ್ದರು. ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.
‘ಕೃತ್ಯ ಎಸಗಿದ ಬಳಿಕ ಆರೋಪಿ ಉತ್ತರ ಪ್ರದೇಶದಲ್ಲಿ ತಲೆಮರೆಸಿಕೊಂಡಿದ್ದ. ಸೆ.25ರಂದು ವಿಶೇಷ ಪೊಲೀಸ್ ತಂಡವು ಉತ್ತರ ಪ್ರದೇಶಕ್ಕೆ ತೆರಳಿ, ಅಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ. ಕೆಲಸಕ್ಕಿದ್ದ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಮಾಡಿದ್ದಾಗಿ ಆರೋಪಿ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ’ ಎಂದು ಪೊಲೀಸರು ಹೇಳಿದರು.
‘ಕಳ್ಳತನ ಮಾಡಿದ್ದ ಆಭರಣಗಳನ್ನು ಆರೋಪಿ ಮಾರಾಟ ಮಾಡಿದ್ದ. ಆ ಅಂಗಡಿಯಿಂದ ₹35 ಲಕ್ಷದ ಆಭರಣವನ್ನು ಜಪ್ತಿ ಮಾಡಲಾಗಿದೆ’ ಎಂದು ಮೂಲಗಳು ಹೇಳಿವೆ.
ಉತ್ತರ ವಿಭಾಗದ ಡಿಸಿಪಿ ಬಿ.ಎಸ್.ನೇಮಗೌಡ ಅವರ ನೇತೃತ್ವದಲ್ಲಿ ಜೆ.ಸಿ. ನಗರ ಠಾಣೆಯ ಇನ್ಸ್ಪೆಕ್ಟರ್ ಕೆ.ಎಂ.ಚೈತನ್ಯ ನೇತೃತ್ವದ ತಂಡವು ಕಾರ್ಯಾಚರಣೆ ನಡೆಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.