ADVERTISEMENT

ಬೆಂಗಳೂರು: ಇಬ್ಬರು ವಿದೇಶಿ ಡ್ರಗ್ಸ್ ಪೆಡ್ಲರ್‌ಗಳ ಬಂಧನ

ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಕಾರ್ಯಾಚರಣೆ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2025, 15:54 IST
Last Updated 4 ಮಾರ್ಚ್ 2025, 15:54 IST
ಆರೋಪಿಗಳಿಂದ ಜಪ್ತಿ ಮಾಡಿಕೊಂಡ ಮಾದಕ ವಸ್ತು ಎಂಡಿಎಂಎ ಅನ್ನು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಪರಿಶೀಲಿಸಿದರು 
ಆರೋಪಿಗಳಿಂದ ಜಪ್ತಿ ಮಾಡಿಕೊಂಡ ಮಾದಕ ವಸ್ತು ಎಂಡಿಎಂಎ ಅನ್ನು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಪರಿಶೀಲಿಸಿದರು    

ಬೆಂಗಳೂರು: ಕೆ.ಆರ್.ಪುರ ಪೊಲೀಸ್‌ ಠಾಣಾ ವ್ಯಾಪ್ತಿಯ ಗಾರ್ಡನ್‌ ಸಿಟಿ ಕಾಲೇಜು ಬಳಿಯ ರಸ್ತೆಯೊಂದರಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಇಬ್ಬರು ವಿದೇಶಿ ಡ್ರಗ್ಸ್‌ ಪೆಡ್ಲರ್‌ಗಳನ್ನು ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಸಿಬ್ಬಂದಿ ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ.

ನೈಜೀರಿಯಾದ ಪ್ರಜೆಗಳಾದ ಎಸ್ಸೊ ಜರ್ಮನ್ ಮತ್ತು ಜಾನ್ ಚುಕುವಾ ಬಂಧಿತರು.

ಬಂಧಿತರಿಂದ ₹17 ಲಕ್ಷ ಮೌಲ್ಯದ 108 ಗ್ರಾಂ ಬಿಳಿ ಬಣ್ಣದ ಎಂ.ಡಿ.ಎಂ.ಎ ಕ್ರಿಸ್ಟಲ್‌, ಎರಡು ಮೊಬೈಲ್‌ ಹಾಗೂ ಒಂದು ದ್ವಿಚಕ್ರ ವಾಹನವನ್ನು ಜಪ್ತಿ ಮಾಡಲಾಗಿದೆ ಎಂದು ನಗರ ಪೊಲೀಸ್‌ ಕಮಿಷನರ್‌ ಬಿ.ದಯಾನಂದ ಮಂಗಳವಾರ ತಿಳಿಸಿದರು.

ADVERTISEMENT

‘ಇಬ್ಬರೂ ಡ್ರಗ್ಸ್ ಪೆಡ್ಲರ್‌ಗಳು ಪ್ರವಾಸಿ ವೀಸಾ ಪಡೆದು ಭಾರತಕ್ಕೆ ಬಂದಿದ್ದರು. ಐದು ವರ್ಷಗಳಿಂದ ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ನೆಲಸಿದ್ದರು. ಇಬ್ಬರೂ ಮೋಜಿನ ಜೀವನ ನಡೆಸುವ ಉದ್ದೇಶದಿಂದ ಕಡಿಮೆ ಅವಧಿಯಲ್ಲಿ ಹೆಚ್ಚಿನ ಹಣ ಗಳಿಸಲು ಡ್ರಗ್ಸ್ ಮಾರಾಟ ದಂಧೆಗೆ ಇಳಿದಿದ್ದರು. ದೆಹಲಿಯಲ್ಲಿ ನೆಲಸಿದ್ದ ತಮ್ಮ ಸ್ನೇಹಿತರ ಮೂಲಕ ಕಡಿಮೆ ಮೊತ್ತಕ್ಕೆ ಮಾದಕ ವಸ್ತುಗಳನ್ನು ಖರೀದಿಸಿ, ನಗರಕ್ಕೆ ತರುತ್ತಿದ್ದರು. ಅದನ್ನು ನಗರದಲ್ಲಿ ಪರಿಚಿತ ಗ್ರಾಹಕರು, ಸಾಫ್ಟ್‌ವೇರ್ ಎಂಜಿನಿಯರ್‌, ಕಾಲೇಜು ವಿದ್ಯಾರ್ಥಿಗಳು ಹಾಗೂ ಪೇಯಿಂಗ್ ಗೆಸ್ಟ್‌ನಲ್ಲಿ ನೆಲಸಿದ್ದವರಿಗೆ ಮಾರಾಟ ಮಾಡಿ ಹೆಚ್ಚಿನ ಹಣ ಗಳಿಸುತ್ತಿದ್ದರು’ ಎಂದು ತಿಳಿಸಿದರು.

ವೀಸಾ ಅವಧಿ ಮುಕ್ತಾಯ: ಇಬ್ಬರ ಬಂಧನ
ಬೆಂಗಳೂರು: ವೀಸಾ ಅವಧಿ ಮುಕ್ತಾಯವಾಗಿದ್ದರೂ ನಗರದಲ್ಲಿ ಅಕ್ರಮವಾರಿ ನೆಲಸಿದ್ದ ಬ್ರೆಜಿಲ್‌ನ ಲೂಕೋಸ್‌ ಹೆನ್ರಿಕ್‌ (24) ಹಾಗೂ ಅರ್ಜೆಂಟಿನಾದ ಸ್ಯಾಮ್ಯುವೆಲ್‌ (26) ಎಂಬುವರನ್ನು ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಸಿಬ್ಬಂದಿ ಬಂಧಿಸಿದ್ದಾರೆ. ಹೆಬ್ಬಾಳ ಪೊಲೀಸ್‌ ಠಾಣಾ ವ್ಯಾಪ್ತಿಯ ಆನಂದ್‌ನಗರದ ಮನೆಯೊಂದರಲ್ಲಿ ಅವರು ನೆಲಸಿದ್ದರು ಎಂದು ಮೂಲಗಳು ತಿಳಿಸಿವೆ. ‘ಭಾರತೀಯ ಪ್ರಜೆಯೊಬ್ಬರು ಇಬ್ಬರು ವಿದೇಶಿಗರನ್ನು ಬ್ಯುಸಿನೆಸ್ ವೀಸಾದ ಅಡಿ ಭಾರತಕ್ಕೆ ಕರೆ ತಂದಿದ್ದರು. ಅವರನ್ನು ಭಾರತದಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಕಲ್ಪಿಸಿದ್ದರು. ಪೂರ್ವಾಪರ ವಿಚಾರಣೆ ನಡೆಸದೇ ಬಾಡಿಗೆ ಮನೆ ನೀಡಿದ ಮಾಲೀಕ ಅವರನ್ನು ಭಾರತಕ್ಕೆ ಕರೆಸಿಕೊಂಡಿದ್ದ ವ್ಯಕ್ತಿಯ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಪೊಲೀಸರು ಹೇಳಿದರು.
ವಿದೇಶಿ ಪ್ರಜೆಗಳಿಗೆ ಮನೆ: 70 ಪ್ರಕರಣ ದಾಖಲು
ಬೆಂಗಳೂರು: ನಿಯಮ ಪಾಲಿಸದೇ ವಿದೇಶಿ ಪ್ರಜೆಗಳಿಗೆ ಮನೆ ನೀಡಿದವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಜರುಗಿಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ತಿಳಿಸಿದರು. ‘2020ರಿಂದ ಇದುವರೆಗೆ 70 ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅವುಗಳ ಪೈಕಿ 42 ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿವೆ. 26 ಪ್ರಕರಣಗಳು ತನಿಖಾ ಹಂತದಲ್ಲಿವೆ. ಬಂಡೇಪಾಳ್ಯ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ದಾಖಲಾಗಿದ್ದ ಪ್ರಕರಣದ ಸಂಬಂಧ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ನ್ಯಾಯಾಲಯವು ಪ್ರಕರಣದ ವಿಚಾರಣೆ ನಡೆಸಿ ಮನೆ ಮಾಲೀಕರಿಗೆ ₹5 ಸಾವಿರ ದಂಡ ವಿಧಿಸಿದೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾಹಿತಿ ನೀಡಿದರು. ‘ವಿದೇಶಿಯರ ಕಾಯ್ದೆ–1946ರ ಕಲಂ 7ರ ಅಡಿ ಯಾವುದೇ ಮನೆಯ ಮಾಲೀಕ ಅಥವಾ ನಿರ್ವಹಣೆ ಮಾಡುವ ವ್ಯಕ್ತಿ ವಿದೇಶಿ ಪ್ರಜೆಗಳಿಗೆ ತನ್ನ ಮನೆಯನ್ನು ಬಾಡಿಗೆ ನೀಡಿದ 24 ಗಂಟೆಯ ಒಳಗಾಗಿ ವಿದೇಶಿಯರ ನೋಂದಣಿ ಇಲಾಖೆಯ ಆನ್‌ಲೈನ್‌ ಪೋರ್ಟಲ್‌ (http://indianfrro.gov.in/frro/FormC/dummy1.jsp) ಮೂಲಕ ಫಾರಂ–ಸಿ ನಮೂನೆಯನ್ನು ನೋಂದಣಿ ಅಧಿಕಾರಿಗೆ ಸಲ್ಲಿಸಬೇಕು. ಆ ಅಧಿಕಾರಿ ನಮೂನೆ–ಸಿ ಅನ್ನು ಅನುಮೋದಿಸಿದ ನಂತರ ಮನೆಯ ಮಾಲೀಕರು ವಿದೇಶಿ ಪ್ರಜೆಗಳಿಗೆ ತಮ್ಮ ಮನೆಯನ್ನು ಬಾಡಿಗೆಗೆ ನೀಡಬಹುದು’ ಎಂದು ಮಾಹಿತಿ ನೀಡಿದರು. ಇನ್ನು ಮುಂದೆ ಯಾವುದೇ ವಿದೇಶಿ ಪ್ರಜೆಗೆ ತಮ್ಮ ಮನೆಯನ್ನು ಬಾಡಿಗೆ ನೀಡುವ ಮುನ್ನ ಅವರ ಪೂರ್ವಾಪರ ವಿಚಾರಣೆ ನಡೆಸಬೇಕು. ಅದರ ವಿವರನ್ನು ಸಂಬಂಧಿಸಿದ ಪ್ರಾಧಿಕಾರಕ್ಕೆ ಸಲ್ಲಿಸಬೇಕು. ನಿಯಮ ಪಾಲಿಸದ ಮನೆಯ ಮಾಲೀಕರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು. ‘ವಿದೇಶಿ ಪ್ರಜೆಗಳು ಮಾದಕ ವಸ್ತುಗಳ ಮಾರಾಟ ಸಾಗಣೆ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಕುರಿತು ಮಾಹಿತಿ ಬಂದಿದ್ದು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.