ADVERTISEMENT

ಬೆಂಗಳೂರು: ಕುಮಾರಕೃಪಾ ರಸ್ತೆಯಲ್ಲಿ ಚಿತ್ರಸಂತೆ

ಭಾರತೀಯ ವಿಜ್ಞಾನಿಗಳಿಗೆ ಸಮರ್ಪಣೆ * ಕರ್ನಾಟಕ ಚಿತ್ರಕಲಾ ಪರಿಷತ್ತಿನಿಂದ ಆಯೋಜನೆ

​ಪ್ರಜಾವಾಣಿ ವಾರ್ತೆ
Published 6 ಜನವರಿ 2024, 16:03 IST
Last Updated 6 ಜನವರಿ 2024, 16:03 IST
ಚಿತ್ರಸಂತೆ ಪ್ರಯುಕ್ತ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ನಿರ್ಮಿಸಿರುವ ಇಸ್ರೊದ ಚಂದ್ರಯಾನ–3ರ ಪ್ರತಿಕೃತಿಗೆ ಶನಿವಾರ ಅಂತಿಮ ಸ್ಪರ್ಶ ನೀಡಲಾಯಿತು – ಪ್ರಜಾವಾಣಿ ಚಿತ್ರಗಳು/ಎಸ್.ಕೆ. ದಿನೇಶ್
ಚಿತ್ರಸಂತೆ ಪ್ರಯುಕ್ತ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ನಿರ್ಮಿಸಿರುವ ಇಸ್ರೊದ ಚಂದ್ರಯಾನ–3ರ ಪ್ರತಿಕೃತಿಗೆ ಶನಿವಾರ ಅಂತಿಮ ಸ್ಪರ್ಶ ನೀಡಲಾಯಿತು – ಪ್ರಜಾವಾಣಿ ಚಿತ್ರಗಳು/ಎಸ್.ಕೆ. ದಿನೇಶ್   

ಬೆಂಗಳೂರು: ಸಾವಿರಾರು ಕಲಾವಿದರ ಪ್ರತಿಭೆ ಅನಾವರಣಕ್ಕೆ ವೇದಿಕೆ ಕಲ್ಪಿಸುವ ಹಾಗೂ ಅವರು ರಚಿಸಿದ ಕಲಾಕೃತಿಗಳ ಮಾರಾಟಕ್ಕೆ ಅವಕಾಶ ಒದಗಿಸುವ 21ನೇ ‘ಚಿತ್ರಸಂತೆ’ಯನ್ನು ಕರ್ನಾಟಕ ಚಿತ್ರಕಲಾ ಪರಿಷತ್ತು ಭಾನುವಾರ ಕುಮಾರಕೃಪಾ ರಸ್ತೆಯಲ್ಲಿ ಹಮ್ಮಿಕೊಂಡಿದೆ.

ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಮಾಡಿದ ಸಾಧನೆ ಹಾಗೂ ಚಂದ್ರಯಾನ–3ರ ಯಶಸ್ಸಿನಿಂದ ಈ ಬಾರಿಯ ಚಿತ್ರಸಂತೆಯನ್ನು ಭಾರತೀಯ ವಿಜ್ಞಾನಿಗಳಿಗೆ ಸಮರ್ಪಣೆ ಮಾಡಲಾಗಿದೆ. ಬೆಳಿಗ್ಗೆ 8ರಿಂದ ರಾತ್ರಿ 8ರವರೆಗೆ ಕಲಾಕೃತಿಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ. 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಿಗ್ಗೆ 9ಕ್ಕೆ ಪರಿಷತ್ತಿನ ಆವರಣದಲ್ಲಿ ಚಿತ್ರಸಂತೆ ಉದ್ಘಾಟಿಸುತ್ತಾರೆ. ಬೆಳಿಗ್ಗೆ 11ಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ‘ಕಲಾ ಪ್ರದರ್ಶನ’ಕ್ಕೆ ಚಾಲನೆ ನೀಡುತ್ತಾರೆ.

ADVERTISEMENT

ದೇಶದ ವಿವಿಧ ಭಾಗಗಳಿಂದ 1,500 ಕಲಾವಿದರು ಚಿತ್ರಸಂತೆಯಲ್ಲಿ ಭಾಗವಹಿಸಿ, ಕಲಾಕೃತಿಗಳನ್ನು ಪ್ರದರ್ಶಿಸಲಿದ್ದಾರೆ. ಕರ್ನಾಟಕದ ಜತೆಗೆ ಕೇರಳ, ತಮಿಳುನಾಡು, ಆಂಧ್ರಪ್ರದೇಶ, ಗೋವಾ, ಮಹಾರಾಷ್ಟ್ರ, ಪಂಜಾಬ್, ಪಶ್ಚಿಮ ಬಂಗಾಳ, ಒಡಿಶಾ ಸೇರಿದಂತೆ ವಿವಿಧ ರಾಜ್ಯಗಳ ಕಲಾವಿದರು ಪಾಲ್ಗೊಳ್ಳುತ್ತಿದ್ದಾರೆ. 300ಕ್ಕೂ ಅಧಿಕ ಮಳಿಗೆಗಳು ಮೇಳದಲ್ಲಿ ಇರಲಿವೆ. ಪರಿಷತ್ತು ಸಂಗ್ರಹಿಸಿರುವ ತೊಗಲು ಗೊಂಬೆ ಹಾಗೂ ಮೈಸೂರಿನ ಸಾಂಪ್ರದಾಯಿಕ ಕಲಾಕೃತಿಗಳ ಪ್ರದರ್ಶನ ಪರಿಷತ್ತಿನ ಗ್ಯಾಲರಿಗಳಲ್ಲಿ ನಡೆಯಲಿವೆ. 

‘ಹಿರಿಯ ಕಲಾವಿದರು ಹಾಗೂ ಅಂಗವಿಕಲರಿಗೆ ಆಯ್ದ ಸ್ಥಳದಲ್ಲಿ ಅಗತ್ಯ ಸೌಲಭ್ಯ ಒದಗಿಸಿಕೊಡಲಾಗುವುದು. ಪರಿಷತ್ತಿನ ಆವರಣದ ಹೊರಗೆ ಕೆನರಾ ಬ್ಯಾಂಕ್ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಂಚಾರಿ ಎಟಿಎಂ ಇರಲಿವೆ. ಈ ಚಿತ್ರಸಂತೆಯಲ್ಲಿ ₹ 100 ರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಕಲಾಕೃತಿಗಳು ಇರಲಿವೆ. ಕಲಾವಿದರಿಂದ ನೇರವಾಗಿ ಕಲಾಕೃತಿಗಳನ್ನು ಖರೀದಿಸಬಹುದು’ ಎಂದು ಪರಿಷತ್ತಿನ ಅಧ್ಯಕ್ಷ ಬಿ.ಎಲ್. ಶಂಕರ್ ತಿಳಿಸಿದ್ದಾರೆ.

ಚಿತ್ರಸಂತೆಗೆ ಬರುವ ಕಲಾ ರಸಿಕರನ್ನು ಬರಮಾಡಿಕೊಳ್ಳಲು ಪರಿಷತ್ತಿನ ಆವರಣದಲ್ಲಿ ನಿರ್ಮಿಸಲಾಗಿರುವ ಪ್ರವೇಶ ದ್ವಾರ

6 ಲಕ್ಷ ಮಂದಿ ನಿರೀಕ್ಷೆ

ಈ ಬಾರಿಯ ಚಿತ್ರಸಂತೆಗೆ ಐದು ಲಕ್ಷರಿಂದ ಆರು ಲಕ್ಷ ಮಂದಿ ಭೇಟಿ ನೀಡುವ ಸಂಭವವಿದೆ. ಚಿತ್ರಸಂತೆಯಲ್ಲಿ ವ್ಯಂಗ್ಯಚಿತ್ರ ಪ್ರದರ್ಶನಕ್ಕೆ ಅವಕಾಶವಿದೆ. ಕುಂಚ ಅಥವಾ ಪೆನ್ಸಿಲ್‌ಗಳಿಂದ ಕಲಾರಸಿಕರ ಭಾವಚಿತ್ರಗಳನ್ನು ಸ್ಥಳದಲ್ಲಿಯೇ ರಚಿಸಿಕೊಡುವ ಕಲಾವಿದರು ಇರುತ್ತಾರೆ ಎಂದು ಪರಿಷತ್ತು ತಿಳಿಸಿದೆ. ಬೆಳಿಗ್ಗೆ 6ರಿಂದ ರಾತ್ರಿ 9ರವರೆಗೆ ಕುಮಾರಕೃಪಾ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.