ಕೆಂಗೇರಿ: ಕೃತಕ ಬುದ್ಧಿಮತ್ತೆ ತಂತ್ರಜ್ಞಾನವು ದೇಶದ ತಾಂತ್ರಿಕ ಕ್ಷೇತ್ರದ ಬೆಳವಣಿಗೆಯಲ್ಲಿ ಮಹತ್ವದ ಪಾತ್ರವಹಿಸಲಿದೆ ಎಂದು ಭಾರತೀಯ ವಿಜ್ಞಾನ ಸಂಸ್ಥೆಯ ಕಂಪ್ಯೂಟರ್ ಸೈನ್ಸ್ ಮತ್ತು ಆಟೋಮೇಷನ್ ವಿಭಾಗದ ಪ್ರಾಧ್ಯಾಪಕ ಪ್ರೊ. ಡಾ. ವೈ.ನರಹರಿ ಹೇಳಿದರು.
ಆರ್.ವಿ ತಾಂತ್ರಿಕ ಮಹಾವಿದ್ಯಾಲಯ ಮತ್ತು ಫ್ಲೋರಿಡಾ ಅಂತರರಾಷ್ಟ್ರೀಯ ವಿಶ್ವವಿದ್ಯಾಲಯದ ಸಹಯೋಗದಲ್ಲಿ 5ನೇ ಐಇಇಇ ಸಂಸ್ಥೆ ಶುಕ್ರವಾರ ಆಯೋಜಿಸಿದ್ದ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಸಮಸ್ಯೆಗೆ ಸುಸ್ಥಿರ ಪರಿಹಾರ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಅವರು ಮಾತನಾಡಿದರು.
‘ಕೃತಕ ಬುದ್ಧಿಮತ್ತೆ ತಂತ್ರಜ್ಞಾನವು ವೈದ್ಯಕೀಯ, ಆರೋಗ್ಯ, ಸಂಚಾರ, ಶಿಕ್ಷಣ, ನಗರೀಕರಣ ಮತ್ತು ವ್ಯವಸಾಯ ಕ್ಷೇತ್ರದ ಬೆಳವಣಿಗೆಗೆ ಸಹಕಾರಿ. ಈ ತಂತ್ರಜ್ಞಾನದ ಮೂಲಕ ವಿವಿಧ ಕ್ಷೇತ್ರಗಳ ಸರ್ವಾಂಗೀಣ ಪ್ರಗತಿಗೆ ಕೇಂದ್ರ ಸರ್ಕಾರ ಆಸಕ್ತಿ ವಹಿಸಿದೆ. ಹೆಚ್ಚಿನ ಅನುದಾನ ಮೀಸಲಿಡುವ ಮೂಲಕ ಸಂಶೋಧನೆ ಕೈಗೊಳ್ಳಲು ಪ್ರೋತ್ಸಾಹಿಸುತ್ತಿದೆ’ ಎಂದರು.
ಫ್ಲೋರಿಡಾ ಅಂತರಾಷ್ಟ್ರೀಯ ವಿಶ್ವವಿದ್ಯಾಲಯದ ಪ್ರೊ.ಎಸ್. ಎಸ್. ಅಯ್ಯಂಗಾರ್, ‘ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಪ್ರತಿಭೆ ಇರುತ್ತದೆ. ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಗೆ ಅಗತ್ಯ ನೆರವು ನೀಡಿ ಪ್ರತಿಭಾ ಅನಾವರಣಕ್ಕೆ ಪೂರಕ ವಾತಾವರಣ ನಿರ್ಮಾಣ ಮಾಡಬೇಕು’ ಎಂದು ಸಲಹೆ ನೀಡಿದರು.
ಇನ್ಸ್ಟಿಟ್ಯೂಟ್ ಆಫ್ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರ್ಸ್ನ ಬೆಂಗಳೂರು ವಿಭಾಗದ ಮುಖ್ಯಸ್ಥ ಬಿಂದು ಮಾಧವ, ಐಐಎಸ್ಸಿ ಪ್ರಾಧ್ಯಾಪಕ ಪ್ರೊ. ವೈ. ನರಹರಿ, ರಾಷ್ಟ್ರೀಯ ಶಿಕ್ಷಣ ಸಮಿತಿ ಟ್ರಸ್ಟ್ ಗೌರವ ಸಹ ಕಾರ್ಯದರ್ಶಿ ಡಿ.ಪಿ. ನಾಗರಾಜ್, ಡಾ. ಕೆ.ಎನ್. ಸುಬ್ರಮಣ್ಯ, ಡಾ. ಪಿ.ರಮಾಕಾಂತಕುಮಾರ್, ಪಿಇಟಿಇ ವಿಭಾಗದ ಮುಖ್ಯಸ್ಥೆ ಡಾ. ಕೆ.ಶ್ರೀಲಕ್ಷ್ಮಿ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.