ADVERTISEMENT

ಆಶಾ ಕಾರ್ಯಕರ್ತೆಯರ ಧರಣಿ:ಆರೋಗ್ಯ ಸೇವೆಯಲ್ಲಿ ತೊಂದರೆ ಉಂಟಾಗದಂತೆ ಕ್ರಮಕ್ಕೆ ಸೂಚನೆ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2025, 16:04 IST
Last Updated 11 ಆಗಸ್ಟ್ 2025, 16:04 IST
   

ಬೆಂಗಳೂರು: ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್‌ 12ರಿಂದ ಆಶಾ ಕಾರ್ಯಕರ್ತೆಯರು ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸಿದರೆ ಆರೋಗ್ಯ ಸೇವೆಯಲ್ಲಿ ತೊಂದರೆ ಉಂಟಾಗದಂತೆ ಕ್ರಮ ವಹಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರು ಸೂಚನೆ ನೀಡಿದ್ದಾರೆ.

ಆಗಸ್ಟ್‌ 12ರಿಂದ 14ರವರೆಗೆ ನಿತ್ಯ ಜಿಲ್ಲಾ ವ್ಯಾಪ್ತಿಯಲ್ಲಿ ಕರ್ತವ್ಯಕ್ಕೆ ಗೈರು ಹಾಜರಾದ ಆಶಾ ಕಾರ್ಯಕರ್ತೆಯರ ಮಾಹಿತಿಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಪಡೆದು ಜಿಲ್ಲಾಮಟ್ಟದಲ್ಲಿ ಕ್ರೋಡೀಕರಿಸಿ ನಿತ್ಯ 3 ಗಂಟೆಯೊಳಗೆ ಆಯುಕ್ತಾಲಯಕ್ಕೆ ಸಲ್ಲಿಸಬೇಕು. ಸಮುದಾಯ ಆರೋಗ್ಯ ಅಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಆರೋಗ್ಯ ನಿರೀಕ್ಷಣಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರ ಸಹಕಾರ ಪಡೆದು ಆರೋಗ್ಯ ಸೇವೆಯಲ್ಲಿ ತೊಡಕಾಗದಂತೆ ಕ್ರಮ ವಹಿಸಬೇಕು ಎಂದು ಹೇಳಿದ್ದಾರೆ.

ಅಧಿಕಾರಿಗಳು, ಕಾಯಂ ಮತ್ತು ಗುತ್ತಿಗೆ ಸಿಬ್ಬಂದಿಗೆ ವೈದ್ಯಕೀಯ ತುರ್ತು ಹೊರತುಪಡಿಸಿ ಇತರೆ ರಜೆ ನಿರ್ಬಂಧಿಸಬೇಕು. ಕಾನೂನು ಬಾಹಿರ ಹೋರಾಟದಲ್ಲಿ ಭಾಗವಹಿಸದಂತೆ ಆಶಾ ಕಾರ್ಯಕರ್ತೆಯರ ಮನವೊಲಿಸಬೇಕು ಎಂದು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.