ಬೆಂಗಳೂರು: ಮೂವರು ಮಹಿಳೆಯರ ಮೇಲೆ ಗಂಭೀರ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧನದಲ್ಲಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಾಜಿ ಸದಸ್ಯ ನಾಗರಾಜು ಹಾಗೂ ಅವರ ಇಬ್ಬರು ಪುತ್ರರಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ.
ಈ ಸಂಬಂಧ ನಾಗರಾಜು ಮತ್ತು ಅವರ ಪುತ್ರರಾದ ಗಾಂಧಿ ಹಾಗೂ ಶಾಸ್ತ್ರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಬಿ.ಎ.ಪಾಟೀಲ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿ ಅರ್ಜಿ ವಜಾಗೊಳಿಸಿತು.
‘ಅರ್ಜಿದಾರರಿಂದ ಹಲ್ಲೆಗೆ ಒಳಗಾಗಿರುವ ಮಹಿಳೆಯರು ಆಸ್ಪತ್ರೆಯಿಂದ ಬಿಡುಗಡೆಯಾಗಲಿ. ನಂತರ ಅರ್ಜಿದಾರರು ವಿಚಾರಣಾ ನ್ಯಾಯಾಲಯದ ಮುಂದೆ ಜಾಮೀನಿಗೆ ಅರ್ಜಿ ಸಲ್ಲಿಸಬಹುದು’ ಎಂದು ನ್ಯಾಯಪೀಠ ಹೇಳಿದೆ.
ಪ್ರಕರಣವೇನು?: ‘ನಾಗರಾಜು, ಅವರು ಪುತ್ರರೂ ಸೇರಿದಂತೆ 13 ಜನರು ನನ್ನ ಮನೆಯನ್ನು ಅತಿಕ್ರಮವಾಗಿ ಪ್ರವೇಶಿಸಿ, ನನ್ನ ಮೇಲೆ ಮತ್ತು ನನ್ನ ತಾಯಿ ಚಾಮುಂಡೇಶ್ವರಿ ಮೇಲೆ ಮಚ್ಚು, ಲಾಂಗು ಮತ್ತು ಸುತ್ತಿಗೆಯಿಂದ ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ’ ಎಂದು ಶ್ವೇತಾ ಎಂಬುವರು 2018ರ ನವೆಂಬರ್ 11ರಂದು ಶ್ರೀರಾಂಪುರ ಪೊಲೀಸರಿಗೆ ದೂರು ನೀಡಿದ್ದರು.
‘ಗಲಾಟೆ ತಡೆಯಲು ಬಂದ ಬಾಡಿಗೆದಾರರಾದ ಜಯಲಕ್ಷ್ಮೀ ಅವರ ಮೇಲೆಯೂ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ’ ಎಂದು ದೂರಿನಲ್ಲಿ ವಿವರಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅರ್ಜಿದಾರರನ್ನು ಬಂಧಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.