ಬೆಂಗಳೂರು: ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್.ಗವಾಯಿ ಅವರ ಮೇಲೆ ವಕೀಲ ರಾಕೇಶ್ ಕಿಶೋರ್ ಶೂ ಎಸೆಯಲು ಯತ್ನಿಸಿರುವುದನ್ನು ವಿವಿಧ ಸಂಘಟನೆಗಳು ಹಾಗೂ ಸಾಹಿತಿಗಳು ತೀವ್ರವಾಗಿ ಖಂಡಿಸಿದ್ದಾರೆ.
‘ಮುಖ್ಯ ನ್ಯಾಯಮೂರ್ತಿಯವರು ಯಾವುದೇ ಧರ್ಮ ಅಥವಾ ಜಾತಿಗೆ ಸೇರಿದವರಂತೆ ವರ್ತಿಸಿಲ್ಲ. ಸಾಂವಿಧಾನಿಕ ಮೌಲ್ಯಗಳಿಗೆ ಚ್ಯುತಿ ಬಾರದಂತೆ ಕೆಲಸ ನಿರ್ವಹಿಸುತ್ತಿದ್ದಾರೆ. ಹಾಗಾಗಿ ವಕೀಲನ ವಿರುದ್ಧ ಕಾನೂನು ಕ್ರಮ ಕೈಗೊಂಡು, ಸರಿಯಾದ ಶಿಕ್ಷೆ ವಿಧಿಸಬೇಕು’ ಎಂದು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ರಾಜ್ಯ ಆದಿಜಾಂಬವ ಸಂಘ ಆಗ್ರಹಿಸಿದೆ.
‘ನ್ಯಾಯಾಂಗ ವ್ಯವಸ್ಥೆಯ ಮೇಲೆ ನಡೆದ ಹೀನಾಯವಾದ ದಾಳಿ. ದಲಿತ ಸಮುದಾಯಕ್ಕೆ ಸೇರಿದ ಗವಾಯಿ ಅವರು ಸಂವಿಧಾನದ ತತ್ವಗಳ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಮೇಲೆ ಸನಾತನ ಮನಸ್ಥಿತಿಯ ವಕೀಲ ತೋರಿಸಿರುವ ಅಸಹನೆ ಹಿಂದೂ ಧರ್ಮದ ಒಳಗಿನ ಅಸ್ಪೃಶ್ಯತೆ, ಜಾತೀಯತೆಯ ತಾರತಮ್ಯ ಸ್ವಾತಂತ್ರ್ಯಾ ನಂತರವೂ ಗಟ್ಟಿಯಾಗಿ ಉಳಿದುಕೊಂಡಿದೆ ಎನ್ನುವುದನ್ನು ತೋರಿಸುತ್ತದೆ’ ಎಂದು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟದ ಇಂದೂಧರ ಹೊನ್ನಾಪುರ, ಮಾವಳ್ಳಿ ಶಂಕರ್, ವಿ.ನಾಗರಾಜ್, ಗುರುಪ್ರಸಾದ್ ಕೆರಗೋಡು ಹೇಳಿದ್ದಾರೆ.
‘ವಕೀಲನನ್ನು ಭಾರತೀಯ ವಕೀಲರ ಮಂಡಳಿಯಿಂದ ಅಮಾನತುಗೊಳಿಸಿರುವುದು ಸಾಲದು, ಮಂಡಳಿಯ ಸದಸ್ಯತ್ವ ರದ್ದುಗೊಳಿಸಿ, ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ವಿಭಾಗೀಯ ಸಂಘಟನಾ ಸಂಚಾಲಕ ಉಮಾಶಂಕರ್ ಪುನುಗುಮಾರನಹಳ್ಳಿ, ಜಿಲ್ಲಾ ಸಂಘಟನಾ ಸಂಚಾಲಕ ತಗಚಗುಪ್ಪೆ ಹನುಮಂತರಾಜು, ಕಾರ್ಯಕಾರಿ ಸಂಚಾಲಕ ಜೀವನಹಳ್ಳಿ ವೆಂಕಟೇಶ್ ಒತ್ತಾಯಿಸಿದ್ದಾರೆ.
‘ಪ್ರಜಾಪ್ರಭುತ್ವ ವ್ವಸ್ಥೆಯಲ್ಲಿ ನಂಬಿಕೆ ಇಟ್ಟಿರುವ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ. ಸಂವಿಧಾನ ಮತ್ತು ಬಿ.ಆರ್. ಅಂಬೇಡ್ಕರ್ ಅವರಿಗೆ ಮಾಡಿದ ಘೋರ ಅಪಮಾನವಾಗಿದೆ. ವಕೀಲ ರಾಕೇಶ್ ವಿರುದ್ಧ 1989ರ ಪರಿಶಿಷ್ಟ ಜಾತಿ, ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಅಡಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಬಂಧಿಸಬೇಕು’ ಎಂದು ರಾಜ್ಯ ಆದಿಜಾಂಬವ ಸಂಘದ ಕಾರ್ಯಾಧ್ಯಕ್ಷ ಜಂಬೂದ್ವೀಪ ಸಿದ್ದರಾಜು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.