ಹಲ್ಲೆ
– ಗೆಟ್ಟಿ ಚಿತ್ರ
ಬೆಂಗಳೂರು: ರಾಜಾಜಿನಗರದ ನವರಂಗ್ ವೃತ್ತದಲ್ಲಿ ಸುತ್ತಿಗೆ ಹಿಡಿದುಕೊಂಡು ಕಂಡ ಕಂಡವರ ಮೇಲೆ ಹಲ್ಲೆಗೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಸ್ಥಳೀಯರೇ ಹಿಡಿದು ಸುಬ್ರಹ್ಮಣ್ಯನಗರ ಠಾಣೆಯ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಸೋಮವಾರ ರಾತ್ರಿ ಈ ಘಟನೆ ನಡೆದಿದೆ.
ಶಹಾಬುದ್ದೀನ್ ಎಂಬ ವ್ಯಕ್ತಿ ಮದ್ಯದ ಅಮಲಿನಲ್ಲಿ ಕೈಯಲ್ಲಿ ಸುತ್ತಿಗೆ ಹಿಡಿದು ರಸ್ತೆಯಲ್ಲಿ ಓಡಾಟ ನಡೆಸುತ್ತಿದ್ದ. ರಸ್ತೆಬದಿ ನಿಂತಿದ್ದ ಡೆಲಿವರಿ ಬಾಯ್ ಮೇಲೆ ಸುತ್ತಿಗೆ ಬೀಸಲು ಯತ್ನಿಸಿದ್ದ. ಅದೃಷ್ಟವಶಾತ್ ಡೆಲಿವರಿ ಬಾಯ್ ಅಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
‘ಸುತ್ತಿಗೆ ಹಿಡಿದುಕೊಂಡು ರಸ್ತೆಯಲ್ಲಿ ಓಡಾಟ ನಡೆಸುತ್ತ ಭಯ ಮೂಡಿಸಿದ್ದ. ಹೋಟೆಲ್ಗಳಲ್ಲಿ ಊಟ ಮಾಡುತ್ತಿದ್ದವರು ಭಯದಿಂದ ಹೊರಗೆ ಓಡಿಬಂದಿದ್ದರು. ವ್ಯಕ್ತಿ ಸುತ್ತಿಗೆ ಹಿಡಿದುಕೊಂಡು ಓಡಾಟ ನಡೆಸುತ್ತಿದ್ದ ದೃಶ್ಯವನ್ನು ಕೆಲವರು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ಬಳಿಕ, ಬಾರ್ವೊಂದರ ಪಕ್ಕದಲ್ಲಿ ಬಂದು, ಒಂದು ಕೈಯಲ್ಲಿ ಸುತ್ತಿಗೆ ಹಿಡಿದು, ಮತ್ತೊಂದು ಕೈಯಲ್ಲಿ ಸಿಗರೇಟ್ ಸೇದುತ್ತಲೇ ನಿಂತಿದ್ದ. ಆಗ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಬಂದ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡರು’ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
‘ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗಿದೆ. ಇನ್ನು ಮುಂದೆ ಈ ರೀತಿಯ ಕೃತ್ಯ ಎಸಗದಂತೆ ಸೂಚನೆ ನೀಡಲಾಗಿದೆ. ಮದ್ಯದ ಅಮಲಿನಲ್ಲಿ ಕೃತ್ಯ ಎಸಗಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ’ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.