ಬೆಂಗಳೂರು: ‘ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವು ಹಿಂದೂ ಸಂಘಟನೆಗಳ ಮುಖಂಡರನ್ನು ಹತ್ತಿಕ್ಕುವ ಪ್ರಯತ್ನ ನಡೆಸುತ್ತಿದೆ’ ಎಂದು ಶ್ರೀರಾಮಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆರೋಪಿಸಿದರು.
‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ವಿರೋಧಿ ಚಟುವಟಿಕೆಗಳು ನಡೆಯುತ್ತಿವೆ’ ಎಂದು ಆರೋಪಿಸಿ ವಿವಿಧ ಸಂಘಟನೆಗಳ ಮುಖಂಡರ ನಿಯೋಗವು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ–ಐಜಿಪಿ) ಡಾ.ಎಂ.ಎ.ಸಲೀಂ ಅವರಿಗೆ ಸೋಮವಾರ ಮನವಿ ಸಲ್ಲಿಸಿತು. ಬಳಿಕ ಮುತಾಲಿಕ್ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದರು.
‘ಅಬ್ದುಲ್ ರಹಿಮಾನ್ ಕೊಲೆಗೆ ಸೇಡಿನ ಬಣ್ಣ ಕಟ್ಟಿ ಸರ್ಕಾರವು ಹಿಂದೂ ಮುಖಂಡರನ್ನು ಹತ್ತಿಕ್ಕುತ್ತಿದೆ. ಅಬ್ದುಲ್ ರಹಿಮಾನ್ ಅವರ ಕೊಲೆಗೆ ಮರಳು ಮಾಫಿಯಾ ಕಾರಣ. ಆ ವಿಷಯವನ್ನು ರಾಜ್ಯ ಸರ್ಕಾರವು ಮುಚ್ಚಿಡುತ್ತಿದೆ’ ಎಂದು ಆರೋಪಿಸಿದರು.
‘ರಾಜ್ಯ ಸರ್ಕಾರವೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೌಹಾರ್ದ ಕದಡುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ನ ನಿಲುವು ಮತ್ತಷ್ಟು ಬೆಂಕಿ ಹಚ್ಚುತ್ತಿದೆ. ಎಲ್ಲರನ್ನೂ ಒಂದೇ ದೃಷ್ಟಿಕೋನದಿಂದ ನೋಡಿದಾಗ ಮಾತ್ರವೇ ಸೌಹಾರ್ದತೆ ಮೂಡಲು ಸಾಧ್ಯ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೌಹಾರ್ದ ವಾತಾವರಣ ಮೂಡಿಸಲು ಪ್ರಯತ್ನಿಸಬೇಕು’ ಎಂದು ಕೋರಿದರು.
‘ಕೇರಳದ ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್ನ ಸದಸ್ಯರು ಸಾವಿರಾರು ಸಂಖ್ಯೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಬಂದು ಪ್ರತಿಭಟನೆ ಮಾಡಿ, ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏನು ಕೆಲಸ? ಅವರನ್ನು ಜಿಲ್ಲೆಯ ಒಳಗೆ ಬರಲು ಬಿಟ್ಟವರು ಯಾರು? ಅವರ ವಿರುದ್ಧ ಕ್ರಮ ಆಗಬೇಕು. ಪೊಲೀಸರು ತಾರತಮ್ಯ ಮಾಡದೇ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.
‘ಹಿಂದೂ ಕಾರ್ಯಕರ್ತರ ಮನೆಗಳಿಗೆ ಪೊಲೀಸರು ರಾತ್ರಿ ವೇಳೆ ಹೋಗುತ್ತಿದ್ದಾರೆ. ಹಿಂದೂ ಮುಖಂಡರನ್ನು ಹತ್ತಿಕ್ಕುವ ಕೆಲಸ ಮಾಡಿದರೆ ರಾಜ್ಯದಾದ್ಯಂತ ಹೋರಾಟ ನಡೆಸಲಾಗುವುದು’ ಎಂದು ಪ್ರಮೋದ್ ಮುತಾಲಿಕ್ ಎಚ್ಚರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.