ಬೆಂಗಳೂರು: ನೆಲಮಂಗಲ ತಾಲ್ಲೂಕಿನ ಮಲ್ಲರಬಾಣವಾಡಿ ಬಳಿ ಶನಿವಾರ ಕೆಎಸ್ಆರ್ಟಿಸಿ ಬಸ್ ಮತ್ತು ಆಟೊ ನಡುವಿನ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.
ಶಾಂತಿನಗರ ಗ್ರಾಮದ ನಿವಾಸಿಗಳಾದ ಆಟೊ ಚಾಲಕ ಶ್ರೀನಿವಾಸ್ (40), ಪುಟ್ಟಮ್ಮ (55) ಮತ್ತು ವರ್ಷಿಣಿ (13) ಮೃತರು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ವೆಂಕಟೇಶ್ (37), ನಾಗರತ್ನಮ್ಮ (38) ಮತ್ತು 11 ವರ್ಷದ ಬಾಲಕಿ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಂಬಂಧಿಕರ ಮನೆಯ ಕಾರ್ಯಕ್ರಮಕ್ಕೆ ತೆರಳಿದ್ದ ಒಂದೇ ಕುಟುಂಬದ ಆರು ಮಂದಿ ಶಾಂತಿನಗರದಿಂದ ನೆಲಮಂಗಲಕ್ಕೆ ಆಟೊದಲ್ಲಿ ಬರುತ್ತಿದ್ದರು. ಮಲ್ಲರಬಾಣರವಾಡಿ ಕ್ರಾಸ್ ಬಳಿ ಬೆಂಗಳೂರಿನಿಂದ ಹೊರನಾಡಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಬಸ್ನಲ್ಲಿದ್ದ ಪ್ರಯಾಣಿಕರಿಗೆ ಹಾನಿಯಾಗಿಲ್ಲ. ಬಸ್ ಡಿಕ್ಕಿಯಾದ ರಭಸಕ್ಕೆ ಆಟೊ ಸಂಪೂರ್ಣ ನಜ್ಜುಗುಜ್ಜಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಬಳಿಕ ನೆಲಮಂಗಲ ಸಂಚಾರಿ ಪೊಲೀಸರು, ಟೋಲ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕೂಡಲೇ ಗಾಯಾಳುಗಳನ್ನು ನಗರದ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದರು. ಮೃತದೇಹಗಳನ್ನು ಶವಾಗಾರಕ್ಕೆ ರವಾನಿಸಿದರು. ಕ್ರೇನ್ ಮೂಲಕ ಆಟೊ ಮತ್ತು ಬಸ್ ತೆರವುಗೊಳಿಸಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ನೆಲಮಂಗಲ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಅಪಘಾತದ ವಾಹನಗಳ ತೆರವು ಕಾರ್ಯ ನಡೆಸಿದ್ದಾರೆ. ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.