ಬೆಂಗಳೂರು: ಆಯುಷ್ಮಾನ್ ಭಾರತ–ಆರೋಗ್ಯ ಕರ್ನಾಟಕ ಯೋಜನೆಯ ಫಲಾನುಭವಿಗಳಿಗೆ ಆರೋಗ್ಯ ಕಾರ್ಡ್ಗಳನ್ನು ವಿತರಿಸುವ ಕಾರ್ಯಕ್ರಮವನ್ನು ಆರೋಗ್ಯ ಇಲಾಖೆಯು ಗುರುವಾರ ಹಮ್ಮಿಕೊಂಡಿದೆ.
‘ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಕಾರ್ಡ್ಗಳನ್ನು
ಕನ್ನಡ ಮತ್ತು ಇಂಗ್ಲಿಷ್ನಲ್ಲಿ ಮುದ್ರಿಸಿ, ಉಚಿತವಾಗಿ ವಿತರಿಸಲು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ ಸಮ್ಮತಿಸಿದೆ. 1.20 ಕೋಟಿ ಗುರುತಿನ ಚೀಟಿಗಳ ಮುದ್ರಣ ಕಾರ್ಯ ನಡೆಯುತ್ತಿದೆ. ಮುಂದಿನ 3 ತಿಂಗಳ ಒಳಗೆ ಉಳಿದ 4 ಕೋಟಿ ಕಾರ್ಡ್ ವಿತರಿಸುವ ಗುರಿ ಹೊಂದಲಾಗಿದೆ’ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
‘ಯೋಜನೆಯಫಲಾನುಭವಿಗಳು ಗುರುತಿನ ಚೀಟಿ ಹೊಂದಿಲ್ಲದಿದ್ದರೂ, ಆಧಾರ್ ಮತ್ತು ಪಡಿತರ ಚೀಟಿ ಮೂಲಕ ನೋಂದಾಯಿತ ಆಸ್ಪತ್ರೆಗಳಿಂದ ಚಿಕಿತ್ಸೆ ಪಡೆಯಬಹುದು. ನಗರಗಳಲ್ಲಿ ಗುರುತಿನ ಚೀಟಿ ಮುದ್ರಿಸಲು ಕೇಂದ್ರ ಸರ್ಕಾರದಿಂದ ಅನುಮತಿ ಪಡೆದ ಸ್ಮಾರ್ಟ್ ಐಟಿ ಎಂಬ ಸಂಸ್ಥೆಗೆ ಅವಕಾಶ ಕಲ್ಪಿಸಲಾಗಿದೆ. ಈ ಯೋಜನೆಯಡಿ ಖಾಸಗಿ ಸೇರಿ 3,545 ಆಸ್ಪತ್ರೆಗಳಲ್ಲಿ 1,650 ಕಾರ್ಯವಿಧಾನಗಳಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಯೋಜನೆಯಡಿ 42 ಲಕ್ಷ ಫಲಾನುಭವಿಗಳು ₹ 5,426 ಕೋಟಿ ಮೊತ್ತದ ಚಿಕಿತ್ಸೆ ಪಡೆದಿದ್ದಾರೆ’ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.