ವಿಧಾನಸಭೆ: ‘ರಾಜ್ಯದಾದ್ಯಂತ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ನಿರ್ಮಾಣವಾಗಿರುವ ಕಂದಾಯ ಬಡಾವಣೆಗಳ ನಿವೇಶನಗಳಿಗೆ ಬಿ– ಖಾತಾ ನೀಡುವ ಕುರಿತು ತಿಂಗಳೊಳಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಪೌರಾಡಳಿತ ಸಚಿವ ರಹೀಂ ಖಾನ್ ಭರವಸೆ ನೀಡಿದರು.
ಜೆಡಿಎಸ್ನ ಜಿ.ಡಿ. ಹರೀಶ್ ಗೌಡ ಪ್ರಶ್ನೆಗೆ ಶುಕ್ರವಾರ ಉತ್ತರಿಸಿದ ಅವರು, ‘ಅನಧಿಕೃತ ಕಟ್ಟಡಗಳನ್ನು ಸಕ್ರಮಗೊಳಿಸುವ ಉದ್ದೇಶದಿಂದ ರೂಪಿಸಿರುವ ಅಕ್ರಮ– ಸಕ್ರಮ ಯೋಜನೆಯನ್ನು ಜಾರಿಗೊಳಿಸಲು 15 ವರ್ಷಗಳಿಂದ ಸಾಧ್ಯವಾಗಿಲ್ಲ. ಪ್ರಕರಣ ಇನ್ನೂ ಸುಪ್ರೀಂ ಕೋರ್ಟ್ನಲ್ಲಿದೆ. ಆದ್ದರಿಂದ ಬಿ– ಖಾತಾ ನೀಡುವ ಹೊಸ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ’ ಎಂದರು.
ನಿವೇಶನಗಳಿಗೆ ಖಾತಾ ನೀಡುವುದಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಲು ನೇಮಕಗೊಂಡಿರುವ ಸಂಪುಟ ಉಪ ಸಮಿತಿ ಎರಡು ಸಭೆಗಳನ್ನು ನಡೆಸಲಾಗಿದೆ. ಒಂದು ತಿಂಗಳೊಳಗೆ ಈ ಕುರಿತ ಅಂತಿನ ನಿರ್ಧಾರ ಕೈಗೊಂಡು, ಬಿ– ಖಾತಾ ವಿತರಣೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ಹುಣಸೂರು ನಗರಸಭೆ ವ್ಯಾಪ್ತಿಯಲ್ಲಿ 81 ಅನಧಿಕೃತ ಬಡಾವಣೆಗಳು ನಿರ್ಮಾಣಗೊಂಡಿವೆ ಎಂದು ಸಚಿವರು ವಿವರ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.