ಅಪಘಾತ
–ಪ್ರಾತಿನಿಧಿಕ ಚಿತ್ರ
ಬೆಂಗಳೂರು: ದ್ವಿಚಕ್ರ ವಾಹನದಲ್ಲಿ ತಾಯಿ-ಮಗಳು ಹೋಗುತ್ತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ತಾಯಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬಾಣಸವಾಡಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಾಬೂಸಾಬ್ ಪಾಳ್ಯದ ನಿವಾಸಿ ಅರುಣಾ (42) ಮೃತ ಮಹಿಳೆ. ಮಗಳು ನಂದಿನಿಗೆ ಸಣ್ಣ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ತೆರಳಿದ್ದಾರೆ.
ಖಾಸಗಿ ಕಂಪನಿಯಲ್ಲಿ ನಂದಿನಿ ಸಾಫ್ಟ್ವೇರ್ ಎಂಜಿನಿಯರ್ ಆಗಿದ್ದಾರೆ. ಜನವರಿ 24ರಂದು ಸಂಜೆ ನಂದಿನಿ ಅವರು ತಾಯಿಯನ್ನು ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಹೆಬ್ಬಾಳದ ಕಡೆ ಹೋಗುತ್ತಿದ್ದರು. ರಿಂಗ್ ರಸ್ತೆಯ ಹೆಣ್ಣೂರು ಜಂಕ್ಷನ್ ಅಂಡರ್ ಪಾಸ್ನಲ್ಲಿ ಹೋಗುತ್ತಿದ್ದಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನದಿಂದ ಇಬ್ಬರೂ ಕೆಳಗೆ ಬಿದ್ದಿದ್ದಾರೆ. ಆ ಸಂದರ್ಭದಲ್ಲಿ ಕಾರು ಅರುಣಾ ಅವರ ಮೇಲೆ ಹರಿದ ಪರಿಣಾಮ ಗಂಭೀರವಾಗಿ ಗಾಯಗೊಂಡು, ಮೃತಪಟ್ಟರು.
ಕೇರಳದ ವಾಹನ ಚಾಲಕ ಅನಾಸ್ ನಗರದಲ್ಲಿ ಬಾಡಿಗೆ ವಾಹನ ಓಡಿಸುತ್ತಿದ್ದರು. ಅತಿ ವೇಗದ ಚಾಲನೆಯಿಂದಾಗಿ ಈ ದುರ್ಘಟನೆ ನಡೆದಿದೆ. ಚಾಲಕನನ್ನು ಬಂಧಿಸಿ, ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.