ADVERTISEMENT

ಬೆಂಗಳೂರು- ಮೈಸೂರು ರಾ. ಹೆ. ಕಾಮಗಾರಿಗೆ ಜ. 8ರಂದು ಚಾಲನೆ

ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪ್ರಗತಿ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2018, 19:52 IST
Last Updated 1 ಡಿಸೆಂಬರ್ 2018, 19:52 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: 'ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಜ. 8ರಂದು ಚಾಲನೆ ನೀಡಲಾಗುವುದು' ಎಂದು ಮುಖ್ಯಮಂತ್ರಿ ಎಚ್.ಡಿ‌. ಕುಮಾರಸ್ವಾಮಿ ತಿಳಿಸಿದರು.

ರಾಜ್ಯದಲ್ಲಿನ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಶನಿವಾರ ನಡೆಯಿತು.

ಬೆಂಗಳೂರು - ಮೈಸೂರು ಷಟ್ಪಥ ರಸ್ತೆಯ ಪ್ಯಾಕೇಜ್‌ 1 ಹಂತಕ್ಕೆ ಅರಣ್ಯ ಇಲಾಖೆ ಅನುಮತಿ ಸಿಗಬೇಕಿದೆ. ಈ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳುವಂತೆ ಮತ್ತು ಪ್ಯಾಕೇಜ್‌ 2ಗೆ ಸಂಬಂಧಿಸಿದಂತೆ ಡಿನೋಟಿಫಿಕೇಷನ್ ಮತ್ತು ಕಂದಾಯ ದಾಖಲೆಗಳ ಪರಿಷ್ಕರಣೆ ಕಾರ್ಯ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದರು.

ADVERTISEMENT

ಹೆದ್ದಾರಿ ಕಾಮಗಾರಿಗೆ ಅಗತ್ಯವಿರುವ ಭೂ ಸ್ವಾಧೀನ ಪ್ರಕ್ರಿಯೆ ಶೇ 80ರಷ್ಟು ಮುಗಿದಿದೆ. ಸಂಬಂಧಪಟ್ಟ ಜಿಲ್ಲಾಧಿಕಾರಿಗಳು, ಅರಣ್ಯ, ಇಂಧನ, ಕೆಆರ್‌ಡಿಸಿಎಲ್‌ ಇಲಾಖೆಗಳ ಅಧಿಕಾರಿಗಳು ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣಕ್ಕಿರುವ ತೊಡಕುಗಳನ್ನು ನಿವಾರಿಸಬೇಕು ಎಂದು ಮುಖ್ಯಮಂತ್ರಿ ಹೇಳಿದರು.

ತುಮಕೂರು- ಶಿವಮೊಗ್ಗ ಪ್ಯಾಕೇಜ್ 1, 2, 3 , ಬೈರಾಪುರ– ಚಳ್ಳಕೆರೆ ಪ್ಯಾಕೇಜ್ 2, ಬಳ್ಳಾರಿ–ಬೈರಾಪುರ ಪ್ಯಾಕೇಜ್‌ 1, ಚಳ್ಳಕೆರೆ– ಹಿರಿಯೂರು ಪ್ಯಾಕೇಜ್ 3 ಚತುಷ್ಪಥ ರಸ್ತೆ ಕಾಮಗಾರಿಗಳಿಗೆ ಅರಣ್ಯ ಇಲಾಖೆ ಅನುಮತಿ ನೀಡಬೇಕಿದೆ. ಅಧಿಕಾರಿಗಳು ಈ ನಿಟ್ಟಿನಲ್ಲಿ ಕ್ರಮ ವಹಿಸಬೇಕು ಎಂದೂ ಅವರು ಸೂಚಿಸಿದರು.

‘ಶೇಷಗಿರಿ ಹಳ್ಳಿ ಮತ್ತು ಹುಳ್ತಾರ್‌ ಅರಣ್ಯ ಪ್ರದೇಶದಲ್ಲಿ ಭೂಮಿ ಕಳೆದುಕೊಂಡವರಿಗೆ ಆಶ್ರಯ ಯೋಜನೆಯಡಿ ನೆಲೆ ಕಲ್ಪಿಸಲು ರಾಜ್ಯ ಸರ್ಕಾರ ಪರ್ಯಾಯ ಭೂಮಿ ಗುರುತಿಸಿದೆ. ಈ ಪ್ರಸ್ತಾವನೆಗೆ ಅನುಮೋದನೆ ನೀಡಬೇಕು’ ಎಂದು ರಾಮನಗರ ಜಿಲ್ಲಾಧಿಕಾರಿಗೆ ಮುಖ್ಯಮಂತ್ರಿ ಸೂಚಿಸಿದರು.

ಲೋಕೋಪಯೋಗಿ ಸಚಿವ ಎಚ್.ಡಿ .ರೇವಣ್ಣ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಮಹಾನಿರ್ದೇಶಕ ಬಿ.ಎನ್. ಸಿಂಗ್, ಲೋಕೋಪಯೋಗಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌, ಆರ್ಥಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐ.ಎಸ್‌.ಎನ್‌. ಪ್ರಸಾದ್, ಅರಣ್ಯ, ಇಂಧನ, ಕೆಆರ್‌ಡಿಸಿಎಲ್‌ ಇಲಾಖೆಗಳ ಮುಖ್ಯಸ್ಥರು, ಬೆಂಗಳೂರು, ರಾಮನಗರ, ಮಂಡ್ಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸಭೆಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.