ADVERTISEMENT

ಕಬ್ಬು ಬೆಳೆಗಾರರಿಂದ ‘ಬೆಂಗಳೂರು ಚಲೊ’ ನಾಳೆ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2024, 14:31 IST
Last Updated 5 ಫೆಬ್ರುವರಿ 2024, 14:31 IST
ಕಬ್ಬು ಬೆಳೆಗಾರರು –ಸಾಂದರ್ಭಿಕ ಚಿತ್ರ
ಕಬ್ಬು ಬೆಳೆಗಾರರು –ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫೆ.6ರಂದು ‘ಬೆಂಗಳೂರು ಚಲೊ’ ಹಮ್ಮಿಕೊಳ್ಳಲಾಗಿದೆ.

ಅಂದು ಬೆಳಿಗ್ಗೆ 11ರಿಂದ ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಆರಂಭಗೊಳ್ಳಲಿದೆ. ರಾಜ್ಯದ ಎಲ್ಲ ಜಿಲ್ಲೆಗಳಿಂದ ರೈತರು ಈ ಹೋರಾಟದಲ್ಲಿ ಭಾಗಿಯಾಗಲಿದ್ದಾರೆ ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷ ಕರುಬೂರು ಶಾಂತಕುಮಾರ್‌ ತಿಳಿಸಿದ್ದಾರೆ.

‘ತೆಲಂಗಾಣ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವೇ ಅಧಿಕಾರದಲ್ಲಿದ್ದು, ರೈತರ ಸಾಲ ಮನ್ನಾ ಮಾಡಲಾಗಿದೆ. ಅದೇ ಮಾದರಿಯಲ್ಲಿ ರಾಜ್ಯದಲ್ಲೂ ಸಾಲ ಮನ್ನಾ ಮಾಡಬೇಕು. ಕಬ್ಬು ಕಟಾವು ಹಾಗೂ ಸಾಗಣೆ ಹೆಸರಿನಲ್ಲಿ ರೈತರಿಂದ ಹೆಚ್ಚುವರಿ ಹಣ ವಸೂಲಿ ಮಾಡಲಾಗಿದೆ. ರೈತರಿಂದ ಹೆಚ್ಚುವರಿಯಾಗಿ ಪಡೆದ ಹಣವನ್ನು ವಾಪಸ್‌ ಪಾವತಿಸಬೇಕು’ ಎಂದು ಆಗ್ರಹಿಸಿದರು.

ADVERTISEMENT

ತೆಲಂಗಾಣ ರಾಜ್ಯದಲ್ಲಿ ಪ್ರತಿಯೊಬ್ಬರಿಗೂ ರಾಜ್ಯ ಸರ್ಕಾರವೇ ವಿಮಾ ಕಂತು ಪಾವತಿಸಿ, ₹5 ಲಕ್ಷದ ಜೀವ ವಿಮಾ ಪಾಲಿಸಿ ನೀಡಲಾಗಿದೆ. ಆಕಸ್ಮಿಕ, ಅಪಘಾತ, ಸಾವು, ಆತ್ಮಹತ್ಯೆಗೆ ಒಳಗಾದ ಕುಟುಂಬಕ್ಕೆ ₹5 ಲಕ್ಷ ಪರಿಹಾರ ದೊರೆಯುತ್ತದೆ. ಅದೇ ಮಾದರಿಯ ಪಾಲಿಸಿಯನ್ನು ರಾಜ್ಯದಲ್ಲೂ ಜಾರಿಗೆ ತರಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ ‌ಬಜೆಟ್‌ನಲ್ಲಿ ರೈತರ ಪರವಾದ ಯೋಜನೆಗಳನ್ನು ಜಾರಿಗೆ ತರಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.