ಬೆಂಗಳೂರು: ಚಾಕುವಿನಿಂದ ಪತ್ನಿಗೆ ಇರಿದು ಕೊಲೆ ಮಾಡಲು ಯತ್ನಿಸಿ ಪರಾರಿಯಾಗಿದ್ದ ಆರೋಪಿ ಪತಿಯನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕಾಮಾಕ್ಷಿಪಾಳ್ಯದ ಪ್ರಸನ್ನ ಅಲಿಯಾಸ್ ಚಂದ್ರು ಬಂಧಿತ ಆರೋಪಿ. ಮೂರು ದಿನದ ಹಿಂದೆ ಪತ್ನಿ ದೇವಿಕಾ ಮೇಲೆ ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿ ಪರಾರಿಯಾಗಿದ್ದ. ಸಂತ್ರಸ್ತೆ ನೀಡಿದ ದೂರಿನ ಮೇಲೆ ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.
ನಾಗಮಂಗಲ ತಾಲ್ಲೂಕಿನ ಚಂದ್ರು ಹಾಗೂ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ದೇವಿಕಾ ವಿವಾಹವಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಕೌಟುಂಬಿಕ ಕಲಹ ಕಾರಣ ಎರಡು ವರ್ಷದಿಂದ ಪತಿಯಿಂದ ಪ್ರತ್ಯೇಕವಾಗಿ ದೇವಿಕಾ ವಾಸವಾಗಿದ್ದರು. ವಿಪರೀತ ಮದ್ಯ ಸೇವಿಸುತ್ತಿದ್ದ ಆರೋಪಿ, ಪತ್ನಿ ಮೇಲೆ ಅನುಮಾನ ಪಟ್ಟು ಜಗಳವಾಡುತ್ತಿದ್ದ ಎನ್ನಲಾಗಿದೆ.
ಖಾಸಗಿ ಆಸ್ಪತ್ರೆಯಲ್ಲಿ ದೇವಿಕಾ ನರ್ಸ್ ಆಗಿದ್ದರೆ, ಸಂಪ್ ಕ್ಲಿನರ್ ಆಗಿ ಚಂದ್ರು ಕೆಲಸ ಮಾಡುತ್ತಿದ್ದ. ಪತ್ನಿ ಕೆಲಸಕ್ಕೆ ಹೋಗುವ ವೇಳೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಕಿರುಚಾಟ ಕೇಳಿ ಪಕ್ಕದ ಮನೆಯವರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಸಂತ್ರಸ್ತೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.