ಬೆಂಗಳೂರು: ಅಕ್ರಮ ಬಾಂಗ್ಲಾ ವಲಸಿಗರ ತೆರವು ಕಾರ್ಯಾಚರಣೆ ಹೆಸರಿನಲ್ಲಿ ನಗರದ ಕರಿಯಮ್ಮನ ಅಗ್ರಹಾರ, ದೇವರ ಬೀಸನಹಳ್ಳಿ, ಕುಂದಲಹಳ್ಳಿ ಹಾಗೂ ಬೆಳ್ಳಂದೂರು ವ್ಯಾಪ್ತಿಯ ಜೋಪಡಿಗಳಲ್ಲಿ ನೆಲೆಸಿದ್ದವರನ್ನು ತೆರವುಗೊಳಿಸಿರುವ ಕುರಿತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಲ್ಲಿಸಬೇಕಿದ್ದ ಪ್ರಮಾಣಪತ್ರಕ್ಕೆ ಹೈಕೋರ್ಟ್ ಮತ್ತಷ್ಟು ಕಾಲಾವಕಾಶ ನೀಡಿದೆ.
ಈ ಕುರಿತಂತೆ ‘ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್’ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
‘ಈ ಪ್ರಕರಣದಲ್ಲಿ ಅಡ್ವೊಕೇಟ್ ಜನರಲ್ ವಾದ ಮಂಡಿಸಲಿದ್ದು ಅದಕ್ಕಾಗಿ ಇನ್ನಷ್ಟು ಸಮಯ ನೀಡಬೇಕು’ ಎಂಬ ಸರ್ಕಾರದ ಪರ ವಕೀಲರ ಮನವಿಯನ್ನು ಮಾನ್ಯ ಮಾಡಿದ ನ್ಯಾಯಪೀಠ, ಫೆಬ್ರುವರಿ 3ರವರೆಗೆ ಕಾಲಾವಕಾಶ ವಿಸ್ತರಿಸಿದೆ.
ಕಳೆದ ವಿಚಾರಣೆ ವೇಳೆ ನ್ಯಾಯಪೀಠ, ‘ಯಾವ ಕಾನೂನಿನಡಿ, ಯಾವ ಅಧಿಕಾರ ಬಳಸಿ ತೆರವುಗೊಳಿಸಲಾಗಿದೆ’ ಎಂಬ ಬಗ್ಗೆ ಪ್ರಮಾಣಪತ್ರ ಸಲ್ಲಿಸಿ ಎಂದು ನಿರ್ದೇಶಿಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.