ಬೆಂಗಳೂರು: ಬನ್ನೇರುಘಟ್ಟ ಮುಖ್ಯ ರಸ್ತೆಯ ನಮ್ಮ ಮೆಟ್ರೊ ಮಾರ್ಗದಲ್ಲಿರುವ ಪಾದಚಾರಿ ಮಾರ್ಗವನ್ನು ಮಾದರಿಯಾಗಿ ನಿರ್ಮಿಸಲು ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ದಕ್ಷಿಣ ವಲಯ ವ್ಯಾಪ್ತಿಯ ಬನ್ನೇರುಘಟ್ಟ ಮುಖ್ಯ ರಸ್ತೆಯ ಡೇರಿ ವೃತ್ತದಲ್ಲಿ ಪಾದಚಾರಿ ಮಾರ್ಗ, ರಸ್ತೆ ಗುಂಡಿ, ಸ್ವಚ್ಛತೆಯನ್ನು ಅವರು ಪರಿಶೀಲಿಸಿದರು.
ಬಸ್ ಬೇ: ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿ ರಸ್ತೆ ಅಗಲವಿರುವ ಕಡೆ ಬಸ್ ನಿಲ್ಲಲು ವ್ಯವಸ್ಥೆ ಮಾಡುವುದರ ಜೊತೆಗೆ ಬಸ್ ತಂಗುದಾಣಗಳನ್ನು (ಬಸ್ ಬೇ) ನಿರ್ಮಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವುದನ್ನು ತಡೆಯಲು, ಕಸ ಬಿಸಾಡುವವರಿಗೆ ದಂಡ ವಿಧಿಸಬೇಕು. ಮಳೆ ನೀರು ಸರಾಗವಾಗಿ ಹರಿದು ಹೋಗಲು ರಸ್ತೆ ಬದಿಯ ಗ್ರೇಟಿಂಗ್ಗಳ ಬಳಿ ಸ್ವಚ್ಛತೆ ಕಾಪಾಡಬೇಕು ಎಂದರು.
ಬನ್ನೇರುಘಟ್ಟ ಮುಖ್ಯ ರಸ್ತೆಯ ಡೇರಿ ವೃತ್ತದಿಂದ ತಾವರೆಕೆರೆ, ಜಯದೇವ ಆಸ್ಪತ್ರೆ, ಜೆ.ಪಿ ನಗರ 4ನೇ ಹಂತ ಹಾಗೂ ಐಐಎಂಬಿವರೆಗೆ ನಡಿಗೆ ಮೂಲಕ (5.5 ಕಿ.ಮೀ.) ಮಹೇಶ್ವರ್ ರಾವ್ ಪರಿಶೀಲಿಸಿದರು. ದಕ್ಷಿಣ ವಲಯ ಆಯುಕ್ತರಾದ ದಿಗ್ವಿಜಯ್ ಬೋಡ್ಕೆ, ಮುಖ್ಯ ಎಂಜಿನಿಯರ್ ಬಸವರಾಜ್ ಕಬಾಡೆ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.