ADVERTISEMENT

ಬೆಂಗಳೂರು: ಬಸವ ಸಂಸ್ಕೃತಿ ಅಭಿಯಾನ; ಅ.5ರಂದು ಸಮಾರೋಪ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2025, 14:57 IST
Last Updated 3 ಅಕ್ಟೋಬರ್ 2025, 14:57 IST
ಬೆಂಗಳೂರು ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭದ  ಸಿದ್ಧತೆಗಳನ್ನು ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ನೇತೃತ್ವದಲ್ಲಿ ವಿವಿಧ ಸ್ವಾಮೀಜಿಗಳು ಪರಿಶೀಲಿಸಿದರು
ಬೆಂಗಳೂರು ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭದ  ಸಿದ್ಧತೆಗಳನ್ನು ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ನೇತೃತ್ವದಲ್ಲಿ ವಿವಿಧ ಸ್ವಾಮೀಜಿಗಳು ಪರಿಶೀಲಿಸಿದರು   

ಬೆಂಗಳೂರು: ‘ವಿಶ್ವಗುರು ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಸರ್ಕಾರ ಘೋಷಿಸಿ ಒಂದು ವರ್ಷ ಪೂರೈಸಿದ ಪ್ರಯುಕ್ತ ಲಿಂಗಾಯತ ಮಠಾಧಿಪತಿಗಳ ಒಕ್ಕೂಟವು ರಾಜ್ಯದ 30 ಜಿಲ್ಲೆಗಳಲ್ಲಿ ಸೆ.1ರಿಂದ ನಡೆಸಿದ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭ ಅ.5ರಂದು ಬೆಳಿಗ್ಗೆ 10.30ಕ್ಕೆ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ 300ಕ್ಕೂ ಅಧಿಕ ಮಠಾಧೀಶರು ಹಾಗೂ 20 ಸಾವಿರಕ್ಕೂ ಹೆಚ್ಚು ಬಸವ ಅನುಯಾಯಿಗಳು ಭಾಗವಹಿಸಲಿದ್ದಾರೆ ಎಂದು ಅಥಣಿ ಮೋಟಗಿಮಠದ ಪ್ರಭುಚನ್ನಬಸವ ಸ್ವಾಮೀಜಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಬಸವ ಸಂಸ್ಕೃತಿ ಅಭಿಯಾನವು ಜಾಗೃತಿ ಅಭಿಯಾನವಾಗಿದ್ದು, ಜನಮಾನಸದಲ್ಲಿ ಬಸವಣ್ಣನ ತತ್ವವನ್ನು ಅಚ್ಚೊತ್ತುವಂತೆ ಮಾಡುವುದು. ಬಸವತತ್ವದಲ್ಲಿ ಜನರು ಹೆಜ್ಜೆ ಇಡುವಂತೆ ಮಾಡುವುದು ಇದರ ಉದ್ದೇಶವಾಗಿತ್ತು. ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಮಾರೋಪ ಸಮಾರಂಭದಲ್ಲಿ ಸನ್ಮಾನಿಸಲಾಗುವುದು’ ಎಂದು ಅವರು ವಿವರಿಸಿದರು.

ADVERTISEMENT

ಒಕ್ಕೂಟದ ಅಧ್ಯಕ್ಷರಾದ ಭಾಲ್ಕಿ ಹಿರೇಮಠ ಸಂಸ್ಥಾನದ ಬಸವಲಿಂಗ ಪಟ್ಟದ್ದೇವರು ಮಾತನಾಡಿ, ‘ಇದೊಂದು ರಾಜಕೀಯೇತರ ಕಾರ್ಯಕ್ರಮ ಇದರಲ್ಲಿ ವಿವಿಧ ಮಠಾಧೀಶರು ಅಭಿಯಾನದಲ್ಲಿನ ತಮ್ಮ ಅನುಭವಗಳನ್ನು ಹೇಳಿಕೊಳ್ಳಲಿದ್ದಾರೆ. ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ವಿಶೇಷ ಉಪನ್ಯಾಸ ನೀಡಲಿದ್ದಾರೆ. ನಾಡಿನ ಜನಪ್ರತಿನಿಧಿಗಳು, ಸಾಹಿತಿಗಳು, ಚಿಂತಕರು, ಬಸವಪರ ಸಂಘಟಕರು ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.

ಬೇಲಿಮಠದ ಶಿವರುದ್ರ ಸ್ವಾಮೀಜಿ, ‘ನಮ್ಮ ಮನವಿಯನ್ನು ಪುರಸ್ಕರಿಸಿ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಸಿದ್ದರಾಮಯ್ಯ ಘೋಷಣೆ ಮಾಡಿದ್ದರು. ಇದು ಪ್ರಶಸ್ತಿ ಅಥವಾ ಪದಕವಲ್ಲ. ಜನರಲ್ಲಿ ಮೌಢ್ಯದ ವಿರುದ್ಧ ವೈಚಾರಿಕ ಪ್ರಜ್ಞೆ ಮೂಡಿಸುವ ಪ್ರಕ್ರಿಯೆ. ಒಂದು ತಿಂಗಳ ಅಭಿಯಾನ ಸಮಾರೋಪಗೊಳ್ಳಬಹುದು. ಆದರೆ, ಜನಜಾಗೃತಿ ನಿರಂತರವಾಗಿ ಮುಂದುವರಿಯಲಿದೆ. ಬಸವ ಪ್ರಜ್ಞೆ ಮೂಡಿಸುವ ಎಲ್ಲ ಕಾರ್ಯಗಳಿಗೆ ಇದು ಪ್ರೇರಣೆಯಾಗಿದೆ’ ಎಂದರು.

ಸುದ್ದಿಗೋಷ್ಠಿಯಲ್ಲಿ ಬಸವ ಧರ್ಮಪೀಠದ ಗಂಗಾದೇವಿ, ಬೆಳಗಾವಿಯ ನಾಗನೂರು ಮಠದ ಅಲ್ಲಮಪ್ರಭು ಸ್ವಾಮೀಜಿ, ಬೆಂಗಳೂರು ಗುರುವಣ್ಣದೇವರ ಮಠದ ನಂಜುಂಡ ಸ್ವಾಮೀಜಿ, ಜಾಗತಿಕ ಲಿಂಗಾಯತ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಎಸ್‌.ಎಂ. ಜಾಮದಾರ ಭಾಗವಹಿಸಿದ್ದರು.

ಇಂದು ನಗರದಾದ್ಯಂತ ಬಸವ ರಥ
ರಾಜ್ಯದಾದ್ಯಂತ ಸಂಚರಿಸಿರುವ ‘ಬಸವ ರಥ’ ಯಾತ್ರೆ ಬೈಕ್ ರ‍್ಯಾಲಿಯೊಂದಿಗೆ ಅ.4ರಂದು ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಸಂಚರಿಸಲಿದೆ. ಬೆಳಿಗ್ಗೆ 8ಕ್ಕೆ ನೆಲಮಂಗಲದಿಂದ ಹೊರಡಲಿರುವ ರಥವು ಬಸವೇಶ್ವರನಗರ ರಾಜಾಜಿನಗರ ವಿಜಯನಗರ ಮುಂತಾದೆಡೆ ಸಂಚರಿಸಿ ಜಾಗೃತಿ ಮೂಡಿಸಲಿದೆ ಎಂದು ಒಕ್ಕೂಟ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.