ADVERTISEMENT

ವಿಶ್ವಗುರು ಬಸವಣ್ಣಗೆ ಜನ ನಮನ

ಸರಳವಾಗಿ ಬಸವ ಜಯಂತಿ ಆಚರಣೆ * ಸಾಮಾಜಿಕ ಮಾಧ್ಯಮಗಳಲ್ಲಿ ಗೌರವ ಸಂದೇಶ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2020, 19:52 IST
Last Updated 26 ಏಪ್ರಿಲ್ 2020, 19:52 IST
ಬಸವ ಸಮಿತಿ ವತಿಯಿಂದ ಭಾನುವಾರ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮಮದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಸವಣ್ಣನವರ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು
ಬಸವ ಸಮಿತಿ ವತಿಯಿಂದ ಭಾನುವಾರ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮಮದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಸವಣ್ಣನವರ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು   

ಬೆಂಗಳೂರು: ಮಹಾಮಾನವತಾವಾದಿ, ವಿಶ್ವಗುರು ಬಸವೇಶ್ವರರ ಜಯಂತಿಯನ್ನು ಭಾನುವಾರ ನಗರದಾದ್ಯಂತ ಸರಳವಾಗಿ ಆಚರಿಸಲಾಯಿತು. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಯಾವುದೇ ವೇದಿಕೆ ಕಾರ್ಯಕ್ರಮ ಅಥವಾ ಮೆರವಣಿಗೆ ನಡೆಯಲಿಲ್ಲ.ಬಸವಣ್ಣನ ಅನುಯಾಯಿಗಳು ಬೆಳಿಗ್ಗೆ ಬಸವೇಶ್ವರರ ಭಾವಚಿತ್ರಕ್ಕೆ ಹೂವಿನ ಹಾರ ಹಾಕಿ, ದೀಪ ಹಚ್ಚಿ ಮನೆಗಳಲ್ಲಿಯೇ ನಮಿಸಿದರು.

ವಚನ ಜ್ಯೋತಿ ಬಳಗ, ಬಸವ ಸಮಿತಿ, ಕೆಪಿಸಿಸಿ, ಜಯ ಕರ್ನಾಟಕ ಸಂಘಟನೆ, ಶ್ರೀ ಜಗಜ್ಯೋತಿ ಬಸವೇಶ್ವರ ಸಮಿತಿ ಹೀಗೆ ನಾನಾ ಸಂಸ್ಥೆಗಳು ಬಸವ ಜಯಂತಿಯನ್ನು ತಮ್ಮ ಕಚೇರಿಗಳಲ್ಲಿ ಅತ್ಯಂತ ಸರಳವಾಗಿ ಆಚರಿಸಿದವು.

ಬಿಎಸ್‌ವೈ ನಮನ:ಬಸವ ಸಮಿತಿ ವತಿಯಿಂದ ನಗರದ ಬಸವ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಗಜ್ಯೋತಿ ಬಸವೇಶ್ವರರ ಪುತ್ಥಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮೇಯರ್‌ ಗೌತಮ್‌ಕುಮಾರ್ ಪುಷ್ಪನಮನ ಸಲ್ಲಿಸಿದರು.

ADVERTISEMENT

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಉಪಮೇಯರ್ ರಾಮಮೋಹನ ರಾಜು, ಚಿತ್ರದುರ್ಗದ ಮುರುಘಾಮಠದ ಡಾ. ಶಿವಮೂರ್ತಿ ಮುರುಘಾ ಶರಣರು, ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ ಹಾಗೂ ಇತರರು ಉಪಸ್ಥಿತರಿದ್ದರು.

ಕೋವಿಡ್‌–19 ಪರಿಹಾರ ನಿಧಿಗೆ ಬಸವ ಸಮಿತಿ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ₹2.51 ಲಕ್ಷ ಮೊತ್ತದ ಚೆಕ್‌ ಅನ್ನು ಮುಖ್ಯಮಂತ್ರಿಯವರಿಗೆ ನೀಡಲಾಯಿತು.

ಸಾಮಾಜಿಕ ಜಾಲತಾಣಗಳಲ್ಲಿ ಆರಾಧನೆ:ಬಸವ ಜಯಂತಿ ಪ್ರಯುಕ್ತ ಹಲವರು ಬಸವೇಶ್ವರರ ವಚನಗಳನ್ನು, ಅವರ ಸಂದೇಶಗಳನ್ನು ಜನಸಾಮಾನ್ಯರು, ರಾಜಕಾರಣಿಗಳು, ಸೆಲೆಬ್ರಿಟಿಗಳು ಹಾಗೂ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಬಸವ ಜಯಂತಿ ಆಚರಿಸಿದರು.

ಫೇಸ್‌ಬುಕ್‌, ವಾಟ್ಸ್‌ಆ್ಯಪ್‌,ಇನ್‌ಸ್ಟಾಗ್ರಾಂ, ಟ್ವಿಟರ್ ಖಾತೆಗಳಲ್ಲಿ ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವ ಮೂಲಕ ಜಾಗತಿಕವಾಗಿ ಬಸವ ಜಯಂತಿ ಆಚರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.