ಬೆಂಗಳೂರು: ನಗರದಲ್ಲಿ ಅನುಷ್ಠಾನಗೊಳಿಸುತ್ತಿರುವ ಟೆಂಡರ್ಶ್ಯೂರ್ ಹಾಗೂ ವೈಟ್ಟಾಪಿಂಗ್ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಕಾಮಗಾರಿಗಳು ಆಮೆಗತಿಯಲ್ಲಿ ನಡೆಯುತ್ತಿರುವ ಬಗ್ಗೆ ಹಾಗೂ ಇದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿದ್ದರಿಂದ ಬುಧವಾರ ಅವುಗಳ ಪ್ರಗತಿ ಪರಿಶೀಲನೆ ನಡೆಸಿದರು.
‘ಕಾಮಗಾರಿ ವೇಳೆ ಅಗತ್ಯ ಮೂಲಸೌಕರ್ಯ ಕೊಳವೆಗಳ ಸ್ಥಳಾಂತರಕ್ಕೆ ಸಂಬಂಧಿಸಿದ ತೊಡಕುಗಳಿದ್ದರೆ, ಈ ಬಗ್ಗೆ ವಿಸ್ತೃತವಾದ ವರದಿ ಸಿದ್ಧಪಡಿಸಿ, ಇತರ ಇಲಾಖೆಗಳ ಜೊತೆ ಸಮನ್ವಯ ನಡೆಸಬೇಕು. ಪಾದಚಾರಿಗಳಿಗೆ ಅನನುಕೂಲವಾಗದಂತೆ ನೋಡಿಕೊಳ್ಳಬೇಕು. ಕಾಮಗಾರಿಯಿಂದ ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು’ ಎಂದು ಸಲಹೆ ನೀಡಿದರು.
ವೈಟ್ ಟಾಪಿಂಗ್ ಕಾಮಗಾರಿ ಎಲ್ಲೆಲ್ಲ ಪೂರ್ಣಗೊಂಡಿದೆ. ಯಾವ ರಸ್ತೆಗಳಲ್ಲಿ ಎಷ್ಟು ಬಾಕಿಯಿದೆ, ಆ ರಸ್ತೆಗಳು ವಾಹನಗಳ ಸಂಚಾರಕ್ಕೆ ಯೋಗ್ಯವಾಗಿವೆಯೇ, ಸ್ಥಳೀಯವಾಗಿ ಏನು ಸಮಸ್ಯೆಗಳಿವೆ ಎಂದು ರಸ್ತೆವಾರು ಮಾಹಿತಿ ಪಡೆದ ಆಡಳಿತಾಧಿಕಾರಿ, ‘ಸ್ಥಳಿಯ ಸಮಸ್ಯೆಗಳನ್ನು ಇತ್ಯರ್ಥಪಡಿಸಿ ಜನರಿಗೆ ಅನುಕೂಲ ಕಲ್ಪಿಸಬೇಕು’ ಎಂದು ಹೇಳಿದರು.
ಹೊರವರ್ತುಲ ರಸ್ತೆಗಳಲ್ಲಿ ವೈಟ್ಟಾಪಿಂಗ್ ಕಾಮಗಾರಿ ನಡೆಯುತ್ತಿರುವ ಕಡೆ ಸರ್ವೀಸ್ ರಸ್ತೆ, ಪಾದಚಾರಿ ಮಾರ್ಗ ಹಾಗೂ ರಸ್ತೆ ವಿಭಜಕಗಳನ್ನು ಅಭಿವೃದ್ಧಿಪಡಿಸುವ ಕೆಲಸ ವಿಳಂಬವಾಗಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ವೈಟ್ಟಾಪಿಂಗ್ ಯೋಜನೆಯಡಿ ಅಭಿವೃದ್ಧಿಪಡಿಸಬೇಕಾದ ರಸ್ತೆಗಳಲ್ಲಿ ಇನ್ನೂ ಕಾಮಗಾರಿ ಪ್ರಾರಂಭವಾಗಿರದೇ ಇದ್ದಲ್ಲಿ, ಅವುಗಳ ಗುಂಡಿ ಮುಚ್ಚಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಯೋಜನಾ ವಿಭಾಗದ ಮುಖ್ಯ ಎಂಜಿನಿಯರ್, ರಸ್ತೆ ಮೂಲಸೌಕರ್ಯ ವಿಭಾಗದ ಮುಖ್ಯ ಎಂಜಿನಿಯರ್ ಬಿ.ಎಸ್.ಪ್ರಹ್ಲಾದ್, ಸೂಪರಿಂಟೆಂಡಿಂಗ್ ಎಂಜಿನಿಯರ್ ಲೋಕೇಶ್ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿದರು.
ಅಂಕಿ ಅಂಶ
41
ಟೆಂಡರ್ ಶ್ಯೂರ್ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲು ಆಯ್ಕೆಯಾದ ರಸ್ತೆಗಳು
33
ರಸ್ತೆಗಳಲ್ಲಿ ಕಾಮಗಾರಿ ಪೂರ್ಣಗೊಂಡಿದೆ
8
ರಸ್ತೆಗಳಲ್ಲಿ ಕಾಮಗಾರಿಗಳು ಅನುಷ್ಠಾನ ಹಂತದಲ್ಲಿವೆ
68
ರಸ್ತೆಗಳನ್ನು ವೈಟ್ಟಾಪಿಂಗ್ ಕಾಮಗಾರಿಗೆ ಆಯ್ಕೆ ಮಾಡಲಾಗಿದೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.