ADVERTISEMENT

ಜೀವವೈವಿಧ್ಯ ದಾಖಲಾತಿ ಕಾರ್ಯ ಚುರುಕುಗೊಳ್ಳಲಿ: ಅನಂತ ಹೆಗಡೆ ಅಶೀಸರ

​ಪ್ರಜಾವಾಣಿ ವಾರ್ತೆ
Published 5 ಜುಲೈ 2021, 21:17 IST
Last Updated 5 ಜುಲೈ 2021, 21:17 IST
ಸಭೆಯಲ್ಲಿ ಅನಂತ ಹೆಗಡೆ ಅಶೀಸರ ಮಾತನಾಡಿದರು. ಗೌರವ್ ಗುಪ್ತ ಇದ್ದಾರೆ
ಸಭೆಯಲ್ಲಿ ಅನಂತ ಹೆಗಡೆ ಅಶೀಸರ ಮಾತನಾಡಿದರು. ಗೌರವ್ ಗುಪ್ತ ಇದ್ದಾರೆ   

ಬೆಂಗಳೂರು: ‘ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಜೀವವೈವಿಧ್ಯ ದಾಖಲಾತಿ ಕಾರ್ಯ ಇನ್ನಷ್ಟು ಚುರುಕಾಗಿ ನಡೆಸಿ, ತ್ವರಿತವಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು’ ಎಂದು ರಾಜ್ಯ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಅಧಿಕಾರಿಗಳಿಗೆ ಸೂಚಿಸಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಜೀವವೈವಿಧ್ಯ ಸಂರಕ್ಷಣೆ ಕುರಿತು ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಜೀವ ವೈವಿಧ್ಯ ಸಂರಕ್ಷಣೆಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಜುಲೈ 1ರಿಂದ ಆ.15ರವರೆಗೆ ರಾಜ್ಯದಾದ್ಯಂತ ಅಭಿಯಾನ ನಡೆಯುತ್ತಿದೆ. ಅದರ ಅಂಗವಾಗಿ ಬಿಬಿಎಂಪಿಯ ಎಲ್ಲ ವಾರ್ಡ್‌ಗಳಲ್ಲಿಯೂ ನಾಗರಿಕರ ಸಹಭಾಗಿತ್ವದೊಂದಿಗೆ ಸಸಿ ನೆಡುವ, ಕೆರೆಗಳ ಸಮೀಕ್ಷೆ ಹಾಗೂ ರಕ್ಷಣಾ ಕಾರ್ಯ ಮತ್ತು ಜೀವವೈವಿಧ್ಯ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಸನ್ಮಾನ ಸೇರಿದಂತೆ ಇನ್ನಿತರೆ ಕಾರ್ಯಚಟುವಟಿಕೆ ನಡೆಸಲು ಕ್ರಮ ಕೈಗೊಳ್ಳಬೇಕು’ ಎಂದರು.

‘ನಗರದಲ್ಲಿರುವ ಅಪರೂಪದ ಜೈವಿಕ ಪ್ರದೇಶಗಳನ್ನು ಗುರುತಿಸಿ ಅದನ್ನು ಪಾರಂಪರಿಕ ತಾಣವನ್ನಾಗಿ ಘೋಷಿಸವ ಕೆಲಸ ಆಗಬೇಕು. ಅರಣ್ಯಗಳಲ್ಲಿ ಯಾವ ಜಾತಿಯ ಗಿಡಗಳಿವೆ, ನರ್ಸರಿಗಳಲ್ಲಿ ಯಾವ್ಯಾವ ತಳಿಯ ಗಿಡಗಳು ಸಿಗಲಿವೆ ಎಂಬುದರ ಬಗೆಗಿನ ನಿಖರವಾದ ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ಹಾಕುವ ಕೆಲಸ ವಾಗಬೇಕು‘ ಎಂದರು.

ADVERTISEMENT

ಮುಖ್ಯ ಆಯುಕ್ತ ಗೌರವ್ ಗುಪ್ತ, ‘ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಲೆಲ್ಲಿ ಜೀವವೈವಿಧ್ಯ ತಾಣಗಳಿವೆ ಎಂಬುದನ್ನು ಗುರುತಿಸಿ ಅವುಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.