ಬೆಂಗಳೂರು: ಕೋವಿಡ್-19 ಸೋಂಕು ನಿಯಂತ್ರಣ ಸಲುವಾಗಿ ನಗರದಲ್ಲಿ ಲಾಕ್ಡೌನ್ ಜಾರಿಯಲ್ಲಿರುವುದರಿಂದ ಬಿಬಿಎಂಪಿ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಕೇಂದ್ರ ಕಚೇರಿಯ ಆವರಣದಲ್ಲಿ ಸರಳವಾಗಿ ಆಚರಿಸಲಾಯಿತು.
ಅಂಬೇಡ್ಕರ್ ಪ್ರತಿಮೆಗೆ ಮೇಯರ್ ಎಂ.ಗೌತಮ್ ಕುಮಾರ್ ಹಾಗೂ ಇತರ ಗಣ್ಯರು ಮಾಲಾರ್ಪಣೆ ಮಾಡಿದರು.
ಕಾರ್ಯಕ್ರಮದ ಅಂಗವಾಗಿ ಪೌರಕಾರ್ಮಿಕರಿಗೆ ಸ್ಯಾನಿಟೈಸರ್/ ಔಷಧೀಯ ಸಾಬೂನು, ಎರಡು ಜೊತೆ ಮಾಸ್ಕ್, ಒಂದು ಜೊತೆ ಕೈಗವಸು, ಒಂದು ಜೊತೆ ಶೂಗಳಿರುವ ಸ್ವಚ್ಚತಾ ಕಿಟ್ಗಳನ್ನು ವಿತರಿಸಲಾಯಿತು. ಪೌರಕಾರ್ಮಿಕರು ನೆಲೆಸಿರುವ ಕಾಲೊನಿಗಳಲ್ಲಿ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಲಾಯಿತು.
‘ಸಿಹಿತಿಂಡಿಯನ್ನು ಖರೀದಿಸಲು ಪಾಲಿಕೆಯ ಎಲ್ಲ ಪೌರಕಾರ್ಮಿಕರ ಖಾತೆಗೆ ₹ 200 ಜಮೆ ಮಾಡಲಾಗುವುದು. ಎಂಟು ವಲಯಗಳಲ್ಲಿ ಒಟ್ಟು 99 ಪೌರಕಾರ್ಮಿಕರ ಕಾಲೊನಿಗಳಿವೆ. ಪಾಲಿಕೆ ಹಾಗೂ ಬೆಂಗಳೂರು ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯರ ತಂಡವು ಈ ಕಾಲೊನಿಗಳಿಗೆ ತೆರಳಿ ಆರೋಗ್ಯ ತಪಾಸಣೆ ನಡೆಸಲಿದೆ’ ಎಂದು ಮೇಯರ್ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.