ADVERTISEMENT

ಬಿಬಿಎಂಪಿ ಗುತ್ತಿಗೆದಾರರ ವಿರುದ್ಧ ಎನ್‌ಸಿಆರ್ ದಾಖಲು

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2023, 0:30 IST
Last Updated 18 ಆಗಸ್ಟ್ 2023, 0:30 IST
ಬಿಬಿಎಂಪಿ
ಬಿಬಿಎಂಪಿ    

ಬೆಂಗಳೂರು: ‘ಕಾಮಗಾರಿ ಪೂರ್ಣಗೊಳಿಸಿರುವ ಗುತ್ತಿಗೆದಾರರಿಗೆ ಬಾಕಿ ಬಿಲ್‌ ಪಾವತಿಸಲು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ವಿಳಂಬ ನೀತಿ ಅನುಸರಿಸುತ್ತಿದ್ದಾರೆ’ ಎಂದು ಆರೋಪಿಸಿ ರಾಜ್ಯಪಾಲರಿಗೆ ದೂರು ನೀಡಿರುವ ಬೆನ್ನಲ್ಲೇ ಬಿಬಿಎಂಪಿಯ 57 ಗುತ್ತಿಗೆದಾರರ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಎನ್‌ಸಿಆರ್ ದಾಖಲಾಗಿದೆ.

‘ರಾಜ್ಯಪಾಲರಿಗೆ ನೀಡಿರುವ ದೂರಿನ ಪ್ರತಿ ಹಾಗೂ ಇತರೆ ಸಂಗತಿಗಳನ್ನು ಉಲ್ಲೇಖಿಸಿ ಬಿಬಿಎಂಪಿ ಅಧಿಕಾರಿ ಮಹದೇವ್ ದೂರು ನೀಡಿದ್ದಾರೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ.ಟಿ. ಮಂಜುನಾಥ್ ಸೇರಿದಂತೆ 57ಮಂದಿ ವಿರುದ್ಧ ಎನ್‌ಸಿಆರ್ (ಗಂಭೀರವಲ್ಲದ ಪ್ರಕರಣ) ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಬಾಕಿ ಬಿಲ್ ಪಾವತಿ ಮಾಡುತ್ತಿಲ್ಲವೆಂದು ಆರೋಪಿಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ. ಆದರೆ, ಮನವಿಯಲ್ಲಿ ಕೆಲವರು ಮಾತ್ರ ಸಹಿ ಮಾಡಿದ್ದರು. ಜೊತೆಗೆ, ಗುತ್ತಿಗೆದಾರರಲ್ಲದವರ ಸಹಿಯೂ ಮನವಿಯಲ್ಲಿದೆ. ಹೀಗಾಗಿ, ಮನವಿ ಪತ್ರದ ಬಗ್ಗೆ ಹಲವು ಅನುಮಾನಗಳಿವೆ. ಜೊತೆಗೆ, ಬಿಲ್ ನೀಡದಿದ್ದರೆ ದಯಾಮರಣ ನೀಡುವಂತೆಯೂ ಗುತ್ತಿಗೆದಾರರು ಕೋರಿದ್ದಾರೆ. ಬಿಬಿಎಂಪಿ ಹೆಸರಿಗೆ ಚ್ಯುತಿ ತರುವ ಕೆಲಸ ಇದಾಗಿದ್ದು, ತಪ್ಪಿತಸ್ಥರನ್ನು ಪತ್ತೆ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕು’ ಎಂಬುದಾಗಿ ದೂರುದಾರರು ಆಗ್ರಹಿಸಿದ್ದಾರೆ’ ಎಂದು ಮೂಲಗಳು ತಿಳಿಸಿವೆ.

ADVERTISEMENT

ವಿಚಾರಣೆಗಾಗಿ ನೋಟಿಸ್: ‘ದೂರು ಆಧರಿಸಿ ಸಂಘದ ಅಧ್ಯಕ್ಷ ಮಂಜುನಾಥ್ ಸೇರಿ 20 ಮಂದಿಯನ್ನು ಈಗಾಗಲೇ ವಿಚಾರಣೆ ಮಾಡಲಾಗಿದೆ. ಉಳಿದವರಿಗೆ ನೋಟಿಸ್ ನೀಡಲಾಗಿದ್ದು, ಶುಕ್ರವಾರ ವಿಚಾರಣೆಗೆ ಬರುವಂತೆ ಸೂಚಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.