ಬೆಂಗಳೂರು: ಮಲ್ಲೇಶ್ವರ,ರಾಜರಾಜೇಶ್ವರಿನಗರ ಹಾಗೂ ಗಾಂಧಿನಗರ ವಿಭಾಗಗಳಲ್ಲಿ 2008ರಿಂದ 2012ರ ನಡುವೆ ನಡೆದ ಕಾಮಗಾರಿಗಳ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ 25 ಎಂಜಿನಿಯರ್ಗಳನ್ನು ಸೇವೆಯಿಂದ ಬಿಬಿಎಂಪಿ ಬಿಡುಗಡೆಗೊಳಿಸಿದೆ.
ಈ ಮೂರು ವಲಯಗಳ ಕಾಮಗಾರಿಗಳ ಅಕ್ರಮಗಳ ಸಮಗ್ರ ತನಿಖೆಗೆ ಎಚ್.ಎನ್.ನಾಗಮೋಹನ ದಾಸ್ ನೇತೃತ್ವದಲ್ಲಿ ಸಮಿತಿಯನ್ನು ಸರ್ಕಾರ ರಚಿಸಿತ್ತು. ಸಮಿತಿಯು ಆಗಿನ ಬೆಂಗಳೂರು ಅಭಿವೃದ್ಧಿ ಸಚಿವ ಜಿ.ಪರಮೇಶ್ವರ ಅವರಿಗೆ 2018ರ ಡಿಸೆಂಬರ್ನಲ್ಲಿ ಅಂತಿಮ ವರದಿ ಸಲ್ಲಿಸಿತ್ತು. ಈ ಸಮಿತಿ ವರದಿಯ ಶಿಫಾರಸುಗಳ ಜಾರಿ ಕುರಿತು 2019ರ ಅ.19ರಂದು ಬಿಬಿಎಂಪಿಗೆ ಪತ್ರ ಬರೆದಿದ್ದ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ, ತಪ್ಪಿತಸ್ಥ ಅಧಿಕಾರಿಗಳು ಮತ್ತು ಗುತ್ತಿಗೆದಾರರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದರು. ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಲುಬಿಬಿಎಂಪಿ 15 ದಿನಗಳ ಕಾಲಾವಕಾಶ ಕೇಳಿತ್ತು.
‘ಈ 25 ಎಂಜಿನಿಯರ್ಗಳನ್ನು ತಪ್ಪಿತಸ್ಥರೆಂದು ಸಮಿತಿ ಗುರುತಿಸಿದೆ. ಇವರು ಪಾಲಿಕೆಯಲ್ಲಿ ಎರವಲು ಸೇವೆಯಲ್ಲಿದ್ದರು. ಇವರೆಲ್ಲ ಲೋಕೋಪಯೋಗಿ ಇಲಾಖೆಗೆ ಸೇರಿದವರು. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬಿಬಿಎಂಪಿ ಸೇವೆಯಿಂದ ಬಿಡುಗಡೆಗೊಳಿಸಿ, ನಗರಾಭಿವೃದ್ಧಿ ಇಲಾಖೆಯ ವಶಕ್ಕೆ ನೀಡಲಾಗಿದೆ’ ಎಂದು ಪಾಲಿಕೆ ಆಯುಕ್ತ ಬಿ.ಎಚ್.ಅನಿಲ್ ಕುಮಾರ್ ಮಂಗಳವಾರ ಆದೇಶ ಹೊರಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.