ಬೆಂಗಳೂರು: ‘ಸಗಾಯಪುರದ ಪೆರಿಯರ್ ಸರ್ಕಲ್ ಬಳಿ ₹25 ಕೋಟಿ ವೆಚ್ಚದಲ್ಲಿ 100 ಹಾಸಿಗೆಗಳ ಹೈಟೆಕ್ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತಿದೆ’ ಎಂದು ಪುಲಕೇಶಿನಗರ ಶಾಸಕ ಎ.ಸಿ. ಶ್ರೀನಿವಾಸ್ ತಿಳಿಸಿದರು.
ಬಿಬಿಎಂಪಿ ವಿಶೇಷ ಆಯುಕ್ತ (ಆರೋಗ್ಯ) ವಿಕಾಸ್ ಸುರಳ್ಕರ್ ಕಿಶೋರ್ ಅವರ ಜತೆಯಲ್ಲಿ ಆಸ್ಪತ್ರೆ ನಿರ್ಮಾಣ ಕಾಮಗಾರಿಯನ್ನು ಮಂಗಳವಾರ ಪರಿಶೀಲನೆ ನಡೆಸಿದ ಅವರು, ವಿವಿಧ ಇಲಾಖೆಗಳ ಅಧಿಕಾರಿಗಳ ಜತೆಗೆ ಸಭೆ ನಡೆಸಿದರು.
ಬಳಿಕ ಮಾತನಾಡಿದ ಶಾಸಕರು, ‘ಸಗಾಯಪುರದಲ್ಲಿ 20 ಗುಂಟೆ ಜಾಗದಲ್ಲಿ ಮೂರು ಅಂತಸ್ತಿನ ಆಸ್ಪತ್ರೆ ನಿರ್ಮಿಸಲಾಗುತ್ತಿದೆ. ಈ ಆಸ್ಪತ್ರೆಯ ಕಟ್ಟಡದಲ್ಲಿ ಡಯಾಲಿಸಿಸ್ ಜತೆಗೆ, ಎಲ್ಲ ಕಾಯಿಲೆಗಳಿಗೆ ಒಂದೇ ಕಡೆ ಚಿಕಿತ್ಸೆ ಲಭ್ಯವಾಗಲಿದೆ. ₹10 ಕೋಟಿ ವೆಚ್ಚದಲ್ಲಿ ಕುಶಾಲ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ನವೀಕರಣ ಮಾಡಲಾಗುತ್ತದೆ. ಕ್ಷೇತ್ರದಲ್ಲಿರುವ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆರಿಸಲಾಗುತ್ತದೆ’ ಎಂದರು.
‘14 ಕೊಳವೆಬಾವಿಗಳ ಮರು ಕೊರೆಯುವಿಕೆಗೆ ಚಾಲನೆ ನೀಡುವ ಜತೆಗೆ, 10 ಕೊಳವೆಬಾವಿಗಳನ್ನು ಹೊಸದಾಗಿ ಕೊರೆಸಲಾಗುತ್ತಿದೆ’ ಎಂದು ವಿವರಿಸಿದರು.
ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ಡಾ.ಸೈಯದ್ ಮದಿನಿ, ಬಿಬಿಎಂಪಿ ಕಾರ್ಯನಿರ್ವಾಹಕ ಎಂಜಿನಿಯರ್ ತಿಪ್ಪೇಸ್ವಾಮಿ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ದೇವರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜೊಶ್ವಾ, ಫಯಾಜ್ ಖಾನ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.