ಬೆಂಗಳೂರು: ಓಕಳೀಪುರ ಜಂಕ್ಷನ್, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತ, ಸುಜಾತಾ ಟಾಕೀಸ್ ಬಳಿಯ ವೈ ಜಂಕ್ಷನ್, ಶಿವಾನಂದ ವೃತ್ತದಲ್ಲಿ ನಡೆಯುತ್ತಿರುವ ಮೇಲ್ಸೇತುವೆ ಕಾಮಗಾರಿಗಳನ್ನು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಗುರುವಾರ ಪರಿಶೀಲನೆ ನಡೆಸಿದರು.
ಶಿವಾನಂದ ವೃತ್ತದಲ್ಲಿನ ಉಕ್ಕಿನ ಸೇತುವೆ ಕಾಮಗಾರಿ ವೀಕ್ಷಿಸಿದ ಅವರು, ‘579 ಚದರ ಮೀಟರ್ ಭೂಮಿ ಸ್ವಾಧೀನವಾಗಬೇಕಿದ್ದು, ಅದನ್ನು ಕೂಡಲೇ ಇತ್ಯರ್ಥಪಡಿಸಲು ಬೆಂಗಳೂರು ನಗರ ಜಿಲ್ಲಾಧಿಕಾರಿ ಅವರ ಜತೆ ಸಮನ್ವಯ ಸಾಧಿಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕು’ ಎಂದು ಪಾಲಿಕೆ ಅಧಿಕಾರಿಗಳಿಗೆ ಸೂಚನೆ ತಿಳಿಸಿದರು.
ಮೇಲ್ಸೇತುವೆಗೆ ರ್ಯಾಂಪ್ ಹಾಗೂ ತಡೆಗೋಡೆ ನಿರ್ಮಾಣ ಮಾಡುವ ಕೆಲಸ ಬಾಕಿ ಇದೆ. ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.
ಓಕಳಿಪುರ ಅಷ್ಟಪಥ ಕಾರಿಡಾರ್ನಲ್ಲಿ ರೈಲ್ವೆ ಇಲಾಖೆ ನಡೆಸುತ್ತಿರುವ ಬಾಕ್ಸ್ ಪುಶಿಂಗ್ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಪತ್ರ ಬರೆಯಬೇಕು. ಕಾಮಗಾರಿ ಮುಗಿದಿರುವ ಕಡೆ ವಾಹನ ಸಂಚಾರಕ್ಕೆ ಅನುವು ಮಾಡುವಂತೆ ತಿಳಿಸಿದರು.
ಹಳೇ ಮೈಸೂರು ರಸ್ತೆ(ಮಾಗಡಿ ರಸ್ತೆ) ಹಾಗೂ ವಾಟಾಳ್ ನಾಗರಾಜ್ ರಸ್ತೆ(ಸುಜಾತ ಟಾಕೀಸ್) ವೈ ಜಂಕ್ಷನ್ನಲ್ಲಿ ₹30 ಕೋಟಿ ವೆಚ್ಚದಲ್ಲಿ ಗ್ರೇಡ್ ಸಪರೇಟರ್ ನಿರ್ಮಿಸುವ ಯೋಜನೆಗೆ ಸ್ಥಳ ಪರಿಶೀಲನೆ ನಡೆಸಿದರು.
ಸಂಗೊಳ್ಳಿ ರಾಯಣ್ಣ ಪ್ರತಿಮೆ ಬಳಿ ಬಾಕಿ ಇರುವ ಕಾಮಗಾರಿಗಳನ್ನು ತ್ವರಿತವಾಗಿ ಪುರ್ಣಗೊಳಸಬೇಕು. ವಿದ್ಯುತ್ ಕಂಬದ ದೀಪಗಳನ್ನು ಸರಿಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ. ಮಂಜುನಾಥ್, ಪಶ್ಚಿಮ ವಲಯ ಆಯುಕ್ತ ಬಸವರಾಜು, ಯೋಜನಾ ವಿಭಾಗದ ಮುಖ್ಯ ಎಂಜಿನಿಯರ್ ಲೊಕೇಶ್, ರಸ್ತೆ ಮೂಲ ಸೌಕರ್ಯ ವಿಭಾಗದ ಮುಖ್ಯ ಎಂಜಿನಿಯರ್ ಬಿ.ಎಸ್. ಪ್ರಹ್ಲಾದ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.