ಬೆಂಗಳೂರು: ಬಿಬಿಎಂಪಿ ಮತ್ತು ಬಿಡಿಎ ವ್ಯಾಪ್ತಿಯಲ್ಲಿನ ಉದ್ಯಾನಗಳು, ಆಟದ ಮೈದಾನ ಮತ್ತು ತೆರೆದ ಜಾಗಗಳ ಪಟ್ಟಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಈ ವಿಷಯದಲ್ಲಿ ಹೈಕೋರ್ಟ್ ಮಧ್ಯಪ್ರವೇಶ ಕೋರಿ ಹೈಕೋರ್ಟ್ ಕಾನೂನು ಸೇವೆಗಳ ಸಮಿತಿಯು ಕಳೆದ ವರ್ಷ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಉದ್ಯಾನಗಳನ್ನು ಸಂರಕ್ಷಿಸಲು ಕೈಗೊಂಡ ಕ್ರಮಗಳ ಬಗ್ಗೆ ವಿವರ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ನಿರ್ದೇಶನ ನೀಡಿತ್ತು.
‘ಬಿಬಿಎಂಪಿ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿರುವ ಉದ್ಯಾನವನಗಳ ಪಟ್ಟಿಯಲ್ಲಿ, ಸದ್ಯದ ಸ್ಥಿತಿ ಕಾಲಂ ಖಾಲಿ ಇಡಲಾಗಿದೆ. ಕೆಲವು ಕಡೆ ಮಾತ್ರ ‘ಸರಾಸರಿ’ ಎಂದು ನಮೂದಿಸಲಾಗಿದೆ’ ಎಂದು ಅರ್ಜಿದಾರರು ತಿಳಿಸಿದರು. ಮುಂದಿನ ವಿಚಾರಣೆಯನ್ನು ಏಪ್ರಿಲ್ 5ಕ್ಕೆ ಪೀಠ ಮುಂದೂಡಿತು.
‘ಕರ್ನಾಟಕ ಮುನ್ಸಿಪಲ್ ಕಾಯ್ದೆ(ಕೆಎಂಸಿ) ಪ್ರಕಾರ, ಉದ್ಯಾನಗಳನ್ನು ನಿರ್ವಹಿಸುವುದು ಬಿಬಿಎಂಪಿಯ ಆದ್ಯ ಕರ್ತವ್ಯ. ಉದ್ಯಾನ ಎಂದು ಘೋಷಿಸಿದ ಬಳಿಕ ಅವುಗಳ ರಚನೆಗಳ ಮೇಲೆ ಪರಿಣಾಮ ಬೀರುವ ಯಾವುದೇ ನಿರ್ಣಯಗಳನ್ನು ತೆಗೆದುಕೊಳ್ಳಬಾರದು’ ಎಂದು ಈ ಹಿಂದಿನ ವಿಚಾರಣೆ ವೇಳೆ ಪೀಠ ನಿರ್ದೇಶನ ನೀಡಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.