ಬೆಂಗಳೂರು: ಬೆಂಗಳೂರು ಕೇಂದ್ರ ನಗರ ಪಾಲಿಕೆ (ಬಿಸಿಸಿಸಿ) ವ್ಯಾಪ್ತಿಯಲ್ಲಿರುವ ಪ್ರತಿ ವಿಭಾಗಕ್ಕೂ ಪ್ರತ್ಯೇಕ ಗುತ್ತಿಗೆದಾರರನ್ನು ನೇಮಿಸಿ, ರಸ್ತೆ ಗುಂಡಿಗಳನ್ನು ತ್ವರಿತವಾಗಿ ಮುಚ್ಚಬೇಕು ಎಂದು ಆಯುಕ್ತ ರಾಜೇಂದ್ರ ಚೋಳನ್ ಸೂಚಿಸಿದರು.
ಮುಖ್ಯ ಎಂಜಿನಿಯರ್ಗಳು ಹಾಗೂ ಅಧಿಕಾರಿಗಳೊಂದಿಗೆ ಗುರುವಾರ ಸಭೆ ನಡೆಸಿದ ಅವರು, ರಸ್ತೆ ಗುಂಡಿಗಳಿಗೆ ಸಂಬಂಧಿಸಿದಂತೆ ವೆಬ್ ಅಥವಾ ಅಪ್ಲಿಕೇಶನ್ಗಳಲ್ಲಿ ಯಾವುದೇ ದೂರು ಬಾಕಿ ಇರದಂತೆ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.
‘ಸಿಬಿಡಿ ರಸ್ತೆಗಳು, ಟೆಂಡರ್ ಶ್ಯೂರ್ ರಸ್ತೆ, ವೈಟ್ ಟಾಪಿಂಗ್ ರಸ್ತೆಗಳು ಮತ್ತು ಹೈ ಡೆನ್ಸಿಟಿ ಕಾರಿಡಾರ್ಗಳನ್ನು ಗುರುತಿಸಿ, ಮಾದರಿ ರಸ್ತೆಗಳನ್ನಾಗಿ ಮಾಡಬೇಕು ಎಂದು ಕಾರ್ಯಪಾಲಕ ಎಂಜಿನಿಯರ್ಗಳಿಗೆ ಸೂಚಿಸಿದರು. ರಸ್ತೆವಾರು ಪ್ರತ್ಯೇಕ ನೋಡಲ್ ಅಧಿಕಾರಿಗಳನ್ನು ನೇಮಿಸಿ, ನಿರ್ವಹಣೆ ಜವಾಬ್ದಾರಿಯನ್ನು ವಹಿಸಬೇಕು’ ಎಂದು ಹೇಳಿದರು.
‘ಮೆಟ್ರೊ ಪಿಲ್ಲರ್ಗಳು, ರಸ್ತೆ ಇಕ್ಕೆಲಗಳ ಸೌಂದರೀಕರಣಕ್ಕಾಗಿ ಗಿಡಗಳನ್ನು ನೆಡಬೇಕು. ಅಗತ್ಯ ಸ್ಥಳಗಳಲ್ಲಿ ಬೀದಿ ದೀಪಗಳನ್ನು ಅಳವಡಿಸಿ, ನಿರ್ವಹಣೆಗಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.
ಪಾದಚಾರಿ ಮಾರ್ಗ ಒತ್ತುವರಿದಾರರಿಗೆ ಒಂದು ದಿನದ ಮುಂಚಿತವಾಗಿ ನೋಟಿಸ್ ನೀಡಿ ಎಚ್ಚರಿಸಿ, ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ಹಾಗೂ ಸ್ವಚ್ಛತಾ ಅಭಿಯಾನ ನಡೆಸಬೇಕು. ಏಕ ಬಳಕೆ ಪ್ಲಾಸ್ಟಿಕ್ ತಪಾಸಣೆ ನಡೆಸಬೇಕು ಎಂದು ಹೇಳಿದರು.
ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಜಂಟಿ ಆಯುಕ್ತ ರಂಗನಾಥ್, ಮುಖ್ಯ ಎಂಜಿನಿಯರ್ಗಳಾದ ಸುಗುಣ, ವಿಜಯಕುಮಾರ್ ಹರಿದಾಸ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.