ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಇತ್ತೀಚೆಗೆ ಕೋವಿಡ್ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಎಲ್ಲ ವೃಂದಗಳ ಅಧಿಕಾರಿಗಳು ಮತ್ತು ನೌಕರರ ವರ್ಗಾವಣೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ.
ಪಾಲಿಕೆ ಆಯುಕ್ತ ಬಿ.ಎಚ್.ಅನಿಲ್ ಕುಮಾರ್ ಈ ಕುರಿತು ಸೋಮವಾರ ಸುತ್ತೋಲೆ ಹೊರಡಿಸಿದ್ದಾರೆ. ಕೊರೊನಾ ಸೋಂಕು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ಸಲುವಾಗಿ ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಪಾಲಿಕೆಯ ನೌಕರರು ಹಾಗೂ ಅಧಿಕಾರಿಗಳನ್ನು ಈಗಾಗಲೇ ಕೊರೊನಾ ಸೋಂಕು ನಿಯಂತ್ರಣ ಕಾರ್ಯಗಳಿಗೆ ನಿಯೋಜಿಸಲಾಗಿದೆ. ಇಂತಹ ಸಂದರ್ಭದಲ್ಲಿ ಸಿಬ್ಬಂದಿಯನ್ನು ವರ್ಗಾವಣೆ ಮಾಡಿದರೆ ಸೋಂಕು ನಿಯಂತ್ರಣ ಕಾರ್ಯಕ್ಕೆ ತೊಂದರೆ ಉಂಟಾಗಲಿದೆ. ಹಾಗಾಗಿ ಮುಂದಿನ ಆದೇಶದವರೆಗೆ ವರ್ಗಾವಣೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಆಯುಕ್ತರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಸಂದರ್ಭಾನುಸಾರ ಅಧಿಕಾರಿಗಳನ್ನು ಅಥವಾ ನೌಕರರನ್ನು ವರ್ಗಾವಣೆ ಮಾಡುವ ವಿಶೇಷ ಅಧಿಕಾರ ಆಯುಕ್ತರಿಗೆ ಇದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.