ADVERTISEMENT

ಬಿಡಿಎ ಹಗರಣ: ತನಿಖೆಗೆ ಎಸ್ಐಟಿ ರಚಿಸುವಂತೆ ಸಿ.ಎಂಗೆ ಮನವಿ

ಬಿಡಿಎ: 1985 ರಿಂದ 2020 ರವರೆಗಿನ ಹಗರಣ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2020, 21:31 IST
Last Updated 22 ಡಿಸೆಂಬರ್ 2020, 21:31 IST

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ (ಬಿಡಿಎ) 1985ರಿಂದ ಇಲ್ಲಿವರೆಗೆ ನಡೆದಿರುವ ಹಗರಣಗಳ ತನಿಖೆಗೆ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸುವಂತೆ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

‘ಬಿಡಿಎಯ ಹೆಸರಿನಲ್ಲಿ, ಆಯುಕ್ತರು ಹಾಗೂ ಅಧಿಕಾರಿಗಳ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಬಡವರ ಹೆಸರಿನಲ್ಲಿ ನಿವೇಶನಗಳನ್ನು ಹಂಚಿಕೆ ಮಾಡಲು ಸಿದ್ಧತೆ ನಡೆಸಿದ್ದ ಜಾಲವನ್ನು ಪ್ರಾಧಿಕಾರದ ಜಾಗೃತ ದಳ ಬೇಧಿಸಿದೆ. ಇಂತಹ ಹಗರಣಗಳ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚನೆ ಮಾಡುವ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸಲು ಪ್ರಾಧಿಕಾರದ ಆಡಳಿತ ಮಂಡಳಿ ಸಭೆಯಲ್ಲಿ ಇತ್ತೀಚೆಗೆ ನಿರ್ಧರಿಸಲಾಗಿತ್ತು. ಈ ಬಗ್ಗೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದೇವೆ’ ಎಂದು ವಿಶ್ವನಾಥ್‌ ತಿಳಿಸಿದರು.

‘ಬಿಡಿಎಗೆ ಸೇರಿದ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ನಿವೇಶನಗಳನ್ನು ಏಜೆಂಟರ ಜೊತೆ ಶಾಮೀಲಾಗಿ ಕೆಲವು ಭ್ರಷ್ಟ ಅಧಿಕಾರಿಗಳು ಅಕ್ರಮವಾಗಿ ಮಾರಾಟ ಮಾಡಿದ್ದಾರೆ. ಹಲವು ವರ್ಷಗಳಿಂದ ಇಂತಹ ಪ್ರಕರಣಗಳು ನಡೆಯುತ್ತಿವೆ. ನಕಲಿ ದಾಖಲೆ ಸೃಷ್ಟಿಸಿ ನಿವೇಶನಗಳನ್ನು ಹಂಚಿಕೆ ಮಾಡಲು ಹೊರಟಿದ್ದ ಪ್ರಕರಣವು ಬಿಡಿಎಗೆ ಒಂದು ಬಹುದೊಡ್ಡ ಕಪ್ಪುಚುಕ್ಕೆ. ಇದರಿಂದಾಗಿ ಭ್ರಷ್ಟ ಅಧಿಕಾರಿಗಳು ಸಾರ್ವಜನಿಕರಲ್ಲಿ ಬಿಡಿಎಗೆ ಇದ್ದ ವಿಶ್ವಾಸ ಹೊರಟು ಹೋಗುವಂತಾಗಿದೆ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

‘1985 ರಿಂದ ಇಲ್ಲಿವರೆಗೆ ನಡೆದಿರುವ ಹಗರಣಗಳ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ರಚಿಸಬೇಕು ಎಂಬ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿಯವರು ಈ ಸಂಬಂಧ ಪ್ರಾಧಿಕಾರದ ಆಯುಕ್ತರಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದ್ದಾರೆ. ಎಸ್ಐಟಿಯಿಂದ ತನಿಖೆ ನಡೆಸಬಹುದಾದ ಹಗರಣಗಳ ಪಟ್ಟಿಯನ್ನು ಆಯುಕ್ತರು ಸಿದ್ಧಪಡಿಸಲಿದ್ದು, ಶೀಘ್ರವೇ ಸರ್ಕಾರಕ್ಕೆ ಸಲ್ಲಿಸಲಿದ್ದಾರೆ. ಇದನ್ನು ಪರಿಶೀಲಿಸಿ ಎಸ್ಐಟಿ ರಚನೆ ಮತ್ತು ಅದರ ಸ್ವರೂಪದ ಬಗ್ಗೆಮುಖ್ಯಮಂತ್ರಿಯವರು ಅಂತಿಮ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ’ ಎಂದು ಹೇಳಿದರು.

‘ಬಿಡಿಎಗೆ ಕಳಂಕ ತರಲು ಹೊರಟಿರುವ ಭ್ರಷ್ಟ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಿ ಮತ್ತೆ ಬಿಡಿಎಯನ್ನು ಸಾರ್ವಜನಿಕ ಸ್ನೇಹಿಯನ್ನಾಗಿ ಮಾಡಲು ಎಲ್ಲಾ ಪ್ರಯತ್ನ ಕೈಗೊಳ್ಳಲಾಗುವುದು’ ಎಂದು ಅವರು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.