ಬೆಂಗಳೂರು: ‘ಡಿಸೆಂಬರ್ 16ರಂದು ನಡೆಯಲಿರುವ ‘ರಾಷ್ಟ್ರಿಯ ವಿಜಯ ದಿವಸ್’ ವೇಳೆಗೆ 80 ಅಡಿ ಎತ್ತರದ ವೀರಗಲ್ಲು ಸ್ಥಾಪನೆ ಆಗಬೇಕಿದ್ದು, ಶೀಘ್ರವೇ ಕಾಮಗಾರಿ ಪೂರ್ಣಗೊಳಿಸಿ’ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ(ಬಿಡಿಎ) ಅಧಿಕಾರಿಗಳಿಗೆ ತಾಕೀತು ಮಾಡಿದರು.
ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ ವೀರಗಲ್ಲು ಸ್ಥಾಪನೆ ಕಾಮಗಾರಿಯನ್ನು ಶುಕ್ರವಾರ ಪರಿಶೀಲಿಸಿದ ಅವರು, ‘ವಿಜಯ ದಿವಸದ ದಿನವೇ ಸ್ಮಾರಕ ಉದ್ಘಾಟನೆಯಾಗಬೇಕು. ನವೆಂಬರ್ 20ರಂದು ಮತ್ತೊಮ್ಮೆ ಪರಿಶೀಲನೆ ನಡೆಸುತ್ತೇನೆ. ಅಷ್ಟರಲ್ಲಿ ಕಾಮಗಾರಿ ಮುಗಿದಿರಬೇಕು’ ಎಂದರು.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ ಮಾತನಾಡಿ, ‘10 ವರ್ಷಗಳ ಹಿಂದೆ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗಲೇ ಸ್ಮಾರಕ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆ ನೆರವೇರಿದೆ. ಶೀಘ್ರವೇ ಸ್ಮಾರಕವನ್ನು ಲೋಕಾರ್ಪಣೆ ಮಾಡಬೇಕು ಎಂಬುದು ಅವರ ಆಶಯ’ ಎಂದು ಹೇಳಿದರು.
ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಬಿಡಿಎ ಆಯುಕ್ತ ಜಿ.ಸಿ. ಪ್ರಕಾಶ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.