ADVERTISEMENT

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2026, 16:31 IST
Last Updated 2 ಮಾರ್ಚ್ 2026, 16:31 IST
ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಪ್ರತಿಭಟನೆ ನಡೆಸಿದರು -ಪ್ರಜಾವಾಣಿ ಚಿತ್ರ
ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಪ್ರತಿಭಟನೆ ನಡೆಸಿದರು -ಪ್ರಜಾವಾಣಿ ಚಿತ್ರ   

ಬೆಂಗಳೂರು: ಗೌರವಧನ ಹೆಚ್ಚಿಸುವ ಆರನೇ ಗ್ಯಾರಂಟಿ ಹಾಗೂ 2011ರಿಂದ ನಿವೃತ್ತಿಯಾದವರಿಗೆ ಗ್ರಾಚ್ಯುಟಿ ಸೌಲಭ್ಯ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ (ಎಐಟಿಯುಸಿ) ನೇತೃತ್ವದಲ್ಲಿ ಸೋಮವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಯಿತು.

ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿದ್ದ ಸಾವಿರಾರು ಕಾರ್ಯಕರ್ತೆಯರು ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಈ ಬಾರಿಯ ಬಜೆಟ್ ಮಂಡನೆ ವೇಳೆ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ ₹15 ಸಾವಿರ ಹಾಗೂ ಸಹಾಯಕಿಯರಿಗೆ ₹10 ಸಾವಿರ ಗೌರವಧನ ನೀಡುವ, ಚುನಾವಣಾ ಪೂರ್ವದಲ್ಲಿ ಘೋಷಿಸಿದ್ದ 6ನೇ ಗ್ಯಾರಂಟಿಯ ಭರವಸೆ ಜಾರಿಗೊಳಿಸಬೇಕು. ಸುದೀರ್ಘ ಸೇವೆ ಸಲ್ಲಿಸಿ 2011ರಿಂದ ನಿವೃತ್ತರಾಗಿರುವ ವಯೋವೃದ್ಧ ಕಾರ್ಯಕರ್ತೆಯರು ಹಾಗೂ ಸಹಾಯಕರಿಗೆ ಗ್ರಾಚ್ಯುಟಿ ಜಾರಿಗೊಳಿಸಬೇಕು ಮತ್ತು ಸ್ವಯಂ ನಿವೃತ್ತಿಯಾಗಿರುವವರಿಗೂ ಗ್ರಾಚ್ಯುಟಿ ನೀಡಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ADVERTISEMENT

ಎಐಟಿಯುಸಿ ರಾಜ್ಯ ಘಟಕದ ಅಧ್ಯಕ್ಷ ಬಿ.ಅಮ್ಜದ್ ಮಾತನಾಡಿ, ‘ಅಂಗನವಾಡಿ ಕೇಂದ್ರಗಳ ಕೆಲಸಗಳ ಜವಾಬ್ದಾರಿಯೊಂದಿಗೆ ಹೆಚ್ಚುವರಿಯಾಗಿ ಬಿಎಲ್‌ಓ ಜವಾಬ್ದಾರಿ ನೀಡಬಾರದು. ಬಿಎಲ್‌ಓ ಜವಾಬ್ದಾರಿ ನಿರಾಕರಿಸುವ ಕಾರ್ಯಕರ್ತೆಯರ ವಿರುದ್ಧ ಶಿಸ್ತು ಕ್ರಮದ ಹೆಸರಿನಲ್ಲಿ ಅಮಾನತುಗೊಳಿಸುವುದನ್ನು ನಿಲ್ಲಿಸಬೇಕು. ಅಲ್ಲದೆ ಅಂಗನವಾಡಿ ಕೇಂದ್ರಗಳಲ್ಲಿಯೇ ಎಲ್‌.ಕೆ.ಜಿ ಮತ್ತು ಯು.ಕೆ.ಜಿ ಪ್ರಾರಂಭಿಸಿ ಅಂಗನವಾಡಿ ವ್ಯವಸ್ಥೆಯನ್ನು ಬಲವರ್ಧನೆಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಮಾಡಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಜಯಮ್ಮ ಮಾತನಾಡಿ, ‘ಅನಾರೋಗ್ಯಕ್ಕೆ ತುತ್ತಾಗುವ ಕಾರ್ಯಕರ್ತೆಯರಿಗೆ ಶಸ್ತ್ರಚಿಕಿತ್ಸೆ ಸೇರಿ ಎಲ್ಲ ರೀತಿಯ ಚಿಕಿತ್ಸೆಗಾಗಿ ಉಚಿತ ವೈದ್ಯಕೀಯ ಸೌಲಭ್ಯ ನೀಡಲು ಕ್ರಮ ಕೈಗೊಳ್ಳಬೇಕು. ಅನಾರೋಗ್ಯಕ್ಕೆ ಒಳಗಾದ ಅವಧಿಯನ್ನು ವೇತನ ಸಹಿತ ವೈದ್ಯಕೀಯ ರಜೆ ಎಂದು ಪರಿಗಣಿಸಬೇಕು. ಪ್ರಭಾರ ಭತ್ಯೆಯನ್ನು ಹೆಚ್ಚಿಸಬೇಕು. ಖಾಲಿ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಬೇಕು’ ಎಂದು ಆಗ್ರಹಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಮಹೇಶ್ ಬಾಬು ಅವರು ಧರಣಿ ಸ್ಥಳಕ್ಕೆ ಬಂದು ಮನವಿ ಪತ್ರ ಸ್ವೀಕರಿಸಿದರು. ಬಳಿಕ ಸಂಘಟನೆಯ ಪದಾಧಿಕಾರಿಗಳ ನಿಯೋಗ ವಿಧಾನಸೌಧಕ್ಕೆ ತೆರಳಿ, ಮುಖ್ಯಮಂತ್ರಿ ಕಚೇರಿಗೆ ಮನವಿ ಪತ್ರ ಸಲ್ಲಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.