ADVERTISEMENT

ಬೆಂಗಳೂರು | ಸುಂಕ ವಸೂಲಿ: ಗೋಣಿ ಚೀಲ ಧರಿಸಿ ನಡಿಗೆ ಇಂದಿನಿಂದ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2025, 15:42 IST
Last Updated 19 ಮಾರ್ಚ್ 2025, 15:42 IST
<div class="paragraphs"><p>ಬಿಬಿಎಂಪಿ ಕೇಂದ್ರ ಕಚೇರಿ</p></div>

ಬಿಬಿಎಂಪಿ ಕೇಂದ್ರ ಕಚೇರಿ

   

ಬೆಂಗಳೂರು: ‘ಬಿಬಿಎಂಪಿ ವ್ಯಾಪ್ತಿಗೆ ಒಳಪಡುವ ಕೆ.ಆರ್.ಪುರ ಮಾರುಕಟ್ಟೆಯಲ್ಲಿ ಗುತ್ತಿಗೆದಾರರು ತಮ್ಮ ವ್ಯಾಪ್ತಿ ಮೀರಿ ಸುಂಕ ವಸೂಲಿ ಮಾಡುತ್ತಿದ್ದಾರೆ. ಇದನ್ನು ಖಂಡಿಸಿ ಇದೇ 20ರಿಂದ 27ರವರೆಗೆ ಗೋಣಿ ಚೀಲ ಧರಿಸಿ ನಡಿಗೆ ಹಮ್ಮಿಕೊಳ್ಳಲಾಗಿದೆ’ ಎಂದು ಅಖಿಲ ಕರ್ನಾಟಕ ರೈತ ಮತ್ತು ವ್ಯಾಪಾರಿಗಳ ಒಕ್ಕೂಟದ ಅಧ್ಯಕ್ಷ ಎಲೆ ಶ್ರೀನಿವಾಸ್ ತಿಳಿಸಿದರು.

ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಮಾರುಕಟ್ಟೆ ಒಟ್ಟು 5 ಎಕರೆ 20 ಗುಂಟೆ ವಿಸ್ತೀರ್ಣ ಹೊಂದಿದೆ. 2024ರ ಆಗಸ್ಟ್‌ನಲ್ಲಿ ಮಾರುಕಟ್ಟೆಯ 1 ಎಕರೆ 14 ಗುಂಟೆಗೆ ಮಾತ್ರ ಇ-ಟೆಂಡರ್ ಆಗಿದೆ. ಗುತ್ತಿಗೆದಾರರು ನಿಗದಿತ ಪ್ರದೇಶದ ಜತೆಗೆ ಸಂತೆ ಮೈದಾನದಿಂದ ಬಿಬಿಎಂಪಿ ಕಚೇರಿವರೆಗೆ ಅಕ್ರಮವಾಗಿ ಸುಂಕ ವಸೂಲಿ ಮಾಡುತ್ತಿದ್ದಾರೆ. ಈ ಬಗ್ಗೆ ಬಿಬಿಎಂಪಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಆದ್ದರಿಂದ ಸರಣಿ ಹೋರಾಟಕ್ಕೆ ಮುಂದಾಗಿದ್ದೇವೆ’ ಎಂದರು. 

ADVERTISEMENT

‘ಕೆ.ಆರ್. ಪುರ ಮಾರುಕಟ್ಟೆಯಿಂದ ಗೋಣಿ ಚೀಲ ಧರಿಸಿ ವಿವಿಧ ಕಚೇರಿಗಳಿಗೆ ಭೇಟಿ ನೀಡಿ ಮನವಿ ಸಲ್ಲಿಸಲಾಗುತ್ತದೆ. 20ರಂದು ಬಿಬಿಎಂಪಿ ಮಹದೇವಪುರ ವಲಯ ಆಯುಕ್ತರಿಗೆ, 21ರಂದು ಬಿಬಿಎಂಪಿ ಪ್ರಧಾನ ಆಯುಕ್ತರಿಗೆ, 24ರಂದು ಪೊಲೀಸ್ ಕಮಿಷನರ್ ಅವರಿಗೆ, 25ರಂದು ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ, 26ರಂದು ಗೃಹ ಸಚಿವ ಜಿ. ಪರಮೇಶ್ವರ ಅವರಿಗೆ ಹಾಗೂ 27ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ನೀಡಲಾಗುವುದು’ ಎಂದು ಹೇಳಿದರು. 

‘ಬಿಬಿಎಂಪಿ ಅಧಿಕಾರಿಗಳು ಗುತ್ತಿಗೆದಾರರೊಂದಿಗೆ ಶಾಮೀಲಾಗಿದ್ದಾರೆ. ಇದೇ 10ರಂದು 2 ಎಕರೆ 20 ಗುಂಟೆಗೆ ಟೆಂಡರ್ ಕರೆಯಲಾಗಿದ್ದು, ಪ್ರತಿ ಚದರ ಅಡಿಗೆ ₹ 25.64 ನಿಗದಿಪಡಿಸಲಾಗಿದೆ. ಕಳೆದ ವರ್ಷ ಪ್ರತಿ ಚದರ ಅಡಿಗೆ ₹ 11 ನಿಗದಿಪಡಿಸಿ, ಪ್ರಕ್ರಿಯೆ ನಡೆಸಲಾಗಿತ್ತು. ಈಗ ಅಧಿಕ ಹಣ ಗೊತ್ತುಪಡಿಸಿರುವುದರಿಂದ ಟೆಂಡರ್‌ಗೆ ಯಾರೂ ಆಸಕ್ತಿ ತೋರುತ್ತಿಲ್ಲ’ ಎಂದು ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.