ADVERTISEMENT

ದ್ವಿಚಕ್ರ ವಾಹನಗಳನ್ನು ಕದ್ದು ಕಡಿಮೆ ಬೆಲೆಗೆ ಮಾರುತ್ತಿದ್ದ ಕ್ಯಾಬ್‌ ಚಾಲಕ ಸೆರೆ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2025, 15:59 IST
Last Updated 11 ಡಿಸೆಂಬರ್ 2025, 15:59 IST
<div class="paragraphs"><p>ಬಂಧನ (ಸಾಂದರ್ಭಿಕ ಚಿತ್ರ)</p></div>

ಬಂಧನ (ಸಾಂದರ್ಭಿಕ ಚಿತ್ರ)

   

ಬೆಂಗಳೂರು: ನಗರದ ವಿವಿಧೆಡೆ ದ್ವಿಚಕ್ರ ವಾಹನಗಳನ್ನು ಕಳವು ಮಾಡಿ, ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ವೈಟ್‌ಫೀಲ್ಡ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪಟ್ಟಂದೂರು ಅಗ್ರಹಾರದ ನಿವಾಸಿ, ಕ್ಯಾಬ್ ಚಾಲಕ ಯಶವಂತ್ ಎಂಬಾತನನ್ನು ಬಂಧಿಸಿ, ₹9 ಲಕ್ಷ ಮೌಲ್ಯದ ಐದು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ADVERTISEMENT

ಠಾಣಾ ವ್ಯಾಪ್ತಿಯ ನಲ್ಲೂರುಹಳ್ಳಿ ನಿವಾಸಿಯೊಬ್ಬರ ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನ ನವೆಂಬರ್ 21ರಂದು ಕಳವು ಆಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ, ಬಾತ್ಮೀದಾರರ ಮಾಹಿತಿ ಆಧರಿಸಿ, ನಲ್ಲೂರು ಹಳ್ಳಿಯ ಬ್ರಿಗೇಡ್‌ ಟೆಕ್‌ಪಾರ್ಕ್ ಬಳಿ ವಾಹನ ಸಮೇತ ಆರೋಪಿಯನ್ನು ವಶಕ್ಕೆ ಪಡೆದುಕೊಂಡರು. 

‘ನಗರದ ವಿವಿಧೆಡೆ ದ್ವಿಚಕ್ರ ವಾಹನಗಳನ್ನು ಕಳವು ಮಾಡಿರುವುದಾಗಿ ವಿಚಾರಣೆ ವೇಳೆ ಆರೋಪಿ ಒಪ್ಪಿಕೊಂಡಿದ್ದಾನೆ. ಹಾಸನದಲ್ಲಿರುವ ಸ್ನೇಹಿತರಿಬ್ಬರಿಗೆ ಮಾರಾಟ ಮಾಡಿದ್ದ ಮೂರು ವಾಹನ ಹಾಗೂ ಠಾಣಾ ವ್ಯಾಪ್ತಿಯ ದೇವಸ್ಥಾನವೊಂದರ ಪಕ್ಕದ ಜಾಗದಲ್ಲಿ ನಿಲ್ಲಿಸಿದ್ದ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸರು ತಿಳಿಸಿದರು.

‘ಆರೋಪಿಯ ಬಂಧನದಿಂದ ವೈಟ್‌ಫೀಲ್ಡ್‌ ಪೊಲೀಸ್ ಠಾಣೆ, ಮಹದೇವಪುರ, ಪೀಣ್ಯ, ಮಹಾಲಕ್ಷ್ಮೀಪುರ ಹಾಗೂ ಗಿರಿನಗರ ಠಾಣಾ ವ್ಯಾಪ್ತಿಯಲ್ಲಿ ತಲಾ ಒಂದು ದ್ವಿಚಕ್ರ ವಾಹನ ಕಳವು ಪ್ರಕರಣಗಳು ಪತ್ತೆಯಾಗಿವೆ. ವೃತ್ತಿಯಲ್ಲಿ ಕ್ಯಾಬ್‌ ಚಾಲಕನಾಗಿರುವ ಆರೋಪಿ, ವಿಲಾಸಿ ಜೀವನ ನಡೆಸುವ ಉದ್ದೇಶದಿಂದ ವಾಹನಗಳನ್ನು ಕಳವು ಮಾಡುತ್ತಿದ್ದು, ದಾಖಲೆಗಳನ್ನು ನಂತರ ನೀಡುವುದಾಗಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.