ಬೆಂಗಳೂರು: ಮನೆಗೆ ನುಗ್ಗಿ ಚಿನ್ನದ ಆಭರಣ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ರಾಮಮೂರ್ತಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ರಾಮಮೂರ್ತಿನಗರದ ಚೆಲುವಯ್ಯ ರಸ್ತೆಯ ಏಳನೇ ಕ್ರಾಸ್ ನಿವಾಸಿ ನಾಗರಾಜ್ (35) ಬಂಧಿತ. ಮಂಡ್ಯ ಜಿಲ್ಲೆಯ ಹೊಸಹಳ್ಳಿ ಗ್ರಾಮದ ನಾಗರಾಜ್, ನಗರದಲ್ಲಿ ಬಾಡಿಗೆ ಮನೆ ಪಡೆದು ನೆಲಸಿದ್ದ. ಮನೆಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ. ಬಂಧಿತ ಆರೋಪಿಯಿಂದ ₹20 ಲಕ್ಷ ಮೌಲ್ಯದ 153 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ.
ಠಾಣಾ ವ್ಯಾಪ್ತಿಯ ಲಿಟಲ್ ಆಸ್ಪತ್ರೆ ರಸ್ತೆಯ ಬಳಿ ವಾಸವಿದ್ದ ವ್ಯಕ್ತಿಯೊಬ್ಬರು ನೀಡಿದ ದೂರಿನ ಮೇಲೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.
ಡಿ.31ರಂದು ದೂರುದಾರರು ಮನೆಗೆ ಬೀಗ ಹಾಕಿಕೊಂಡು ಚರ್ಚ್ಗೆ ತೆರಳಿದ್ದರು. ಆ ಸಂದರ್ಭದಲ್ಲಿ ಮನೆಗೆ ನುಗ್ಗಿದ್ದ ಆರೋಪಿ, ಕಬೋರ್ಡ್ನಲ್ಲಿದ್ದ ಚಿನ್ನದ ಆಭರಣ ಕಳ್ಳತನ ಮಾಡಿಕೊಂಡು ಪರಾರಿ ಆಗಿದ್ದ. ಕದ್ದ ಚಿನ್ನದ ಪೈಕಿ 30 ಗ್ರಾಂ ಅನ್ನು ಹೊಸಕೆರೆಹಳ್ಳಿಯ ಚಿನ್ನಾಭರಣ ಅಂಗಡಿಗೆ ಮಾರಾಟ ಮಾಡಿದ್ದ. ಉಳಿದ ಚಿನ್ನವನ್ನು ಚೆಲುವಯ್ಯ ರಸ್ತೆಯಲ್ಲಿದ್ದ ತನ್ನ ಬಾಡಿಗೆ ಮನೆಯಲ್ಲಿ ಇಟ್ಟಿದ್ದ. ಎರಡೂ ಸ್ಥಳಗಳಲ್ಲಿದ್ದ ಚಿನ್ನವನ್ನು ಜಪ್ತಿ ಮಾಡಲಾಗಿದೆ ಎಂದು ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.