
ಬೆಂಗಳೂರು: ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ (ಬಿಬಿಸಿ) ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಿಗದಿಪಡಿಸಿರುವ ಪರಿಹಾರ ದರಕ್ಕೆ ವಿರೋಧ ವ್ಯಕ್ತಪಡಿಸಿರುವ ರೈತರು, ಕೇಂದ್ರ ಸರ್ಕಾರದ 2013ರ ಭೂಸ್ವಾಧೀನ ಕಾಯ್ದೆ ಅಡಿ ಪರಿಹಾರ ನೀಡಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಿ.ಆರ್.ಆರ್. ರೈತ ಹಾಗೂ ನಿವೇಶನದಾರರ ಸಂಘದ ಅಧ್ಯಕ್ಷ ಮಾವಳ್ಳಿಪುರ ಶ್ರೀನಿವಾಸ್, ‘74 ಕಿ.ಮೀ. ಪೆರಿಫೆರಲ್ ವರ್ತುಲ ರಸ್ತೆ (ಪಿಆರ್ಆರ್) ನಿರ್ಮಿಸಲು ತುಮಕೂರು ರಸ್ತೆಯಿಂದ ಹೊಸೂರು ರಸ್ತೆವರೆಗೆ 2,580 ಎಕರೆ ಜಮೀನನ್ನು ಸ್ವಾಧೀನ ಮಾಡಲಾಗುತ್ತಿದೆ. ಸಚಿವ ಸಂಪುಟದ ತೀರ್ಮಾನದಂತೆ, ಜಮೀನು ಕಳೆದುಕೊಳ್ಳುವ ಭೂ ಮಾಲೀಕರಿಗೆ ಪ್ರಾಧಿಕಾರವು ಐದು ಪರಿಹಾರ ಆಯ್ಕೆಗಳನ್ನು ನೀಡಿದೆ. ಆದರೆ, ಈ ಪರಿಹಾರ ಆಯ್ಕೆಗಳು ರೈತ ವಿರೋಧಿಯಾಗಿವೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.
‘1894ರಲ್ಲಿ ಬ್ರಿಟಿಷರು ರೂಪಿಸಿದ ಕಾನೂನಿನಡಿ ನೀಡುವ ಪರಿಹಾರ ಬೇಡ. ಬದಲಾಗಿ, ಜಮೀನು ನೀಡುವವರಿಗೆ ಕೇಂದ್ರ ಸರ್ಕಾರದ 2013ರ ಭೂಸ್ವಾಧೀನ ಕಾಯ್ದೆ ಅಡಿ ಪರಿಹಾರ ನಿಗದಿ ಮಾಡಬೇಕು. ಈ ಕಾಯ್ದೆ ಪ್ರಕಾರ ಮಾರುಕಟ್ಟೆ ಬೆಲೆಗಿಂತ ಎರಡು ಪಟ್ಟು ಪರಿಹಾರ ನೀಡುವುದರ ಜತೆಗೆ ಪುನರ್ವಸತಿ ಕಲ್ಪಿಸಬೇಕಾಗುತ್ತದೆ. 1976ರ ಬಿಡಿಎ ಕಾಯ್ದೆಯ ಸೆಕ್ಷನ್ 27ರ ಪ್ರಕಾರ, ಯಾವುದೇ ಯೋಜನೆ ಕಾರ್ಯಗತಗೊಳ್ಳದಿದ್ದರೆ ಅದು ಸ್ವಯಂ ರದ್ದಾಗುತ್ತದೆ. ಈ ಯೋಜನೆ 2005–06ರಲ್ಲಿ ಘೋಷಣೆಯಾದರೂ ಜಾರಿಗೆ ಬಂದಿಲ್ಲ. ಆದ್ದರಿಂದ ಭೂಸ್ವಾಧೀನ ಅಥವಾ ಟೆಂಡರ್ ಆಹ್ವಾನ ಕಾನೂನು ಬದ್ಧವಲ್ಲ’ ಎಂದರು.
‘ಈ ಯೋಜನೆಯ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣಗಳ ವಿಚಾರಣೆ ನಡೆಯುತ್ತಿದ್ದರೂ ನ್ಯಾಯಾಲಯಕ್ಕೆ ಗೌರವ ನೀಡದೆ, ಬಿಡಿಎ ಅಧಿಕಾರಿಗಳು ರೈತರಿಗೆ ನೋಟಿಸ್ ನೀಡುವ ಮೂಲಕ ಬಲವಂತವಾಗಿ ಸಂಧಾನ ಪ್ರಕ್ರಿಯೆ ಪ್ರಾರಂಭಿಸಿದ್ದಾರೆ. ಇದರಿಂದಾಗಿ ಸಂವಿಧಾನಬದ್ಧ ಹಕ್ಕುಗಳ ಉಲ್ಲಂಘನೆಯಾಗಿದೆ. ಜಮೀನಿನ ನೈಜ ಮೌಲ್ಯವನ್ನು ಕಡಿಮೆ ಮಾಡಿ, ರೈತರ ಮೇಲೆ ಒತ್ತಡ ಹೇರಲಾಗುತ್ತಿದೆ. ಶೇ 90ರಷ್ಟು ರೈತರು ಈ ಪರಿಹಾರ ಒಪ್ಪಿಕೊಳ್ಳುತ್ತಿಲ್ಲ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.