ADVERTISEMENT

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಗದು, ಚಾಕು ಪತ್ತೆ: ತನಿಖೆ ಚುರುಕು

​ಪ್ರಜಾವಾಣಿ ವಾರ್ತೆ
Published 25 ಮೇ 2025, 23:30 IST
Last Updated 25 ಮೇ 2025, 23:30 IST
   

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆಸಿದ ಶೋಧದ ದಾಳಿ ವೇಳೆ ನಗದು, ಚಾಕು ಮತ್ತು ಮೊಬೈಲ್ ಪತ್ತೆಗೆ ಸಂಬಂಧಿಸಿದಂತೆ ಜೈಲು ಮತ್ತು ಕರ್ನಾಟಕ ಕೈಗಾರಿಕಾ ಭದ್ರತಾ ಪಡೆ
(ಕೆಎಸ್ಐಎಸ್‌ಎಫ್‌) ಅಧಿಕಾರಿ ಹಾಗೂ ಸಿಬ್ಬಂದಿಯ ವಿಚಾರಣೆ ನಡೆಸಲು ಆಗ್ನೇಯ ವಿಭಾಗದ ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಕೈದಿಗಳು ಮೊಬೈಲ್, ಸ್ಟೌ ಸೇರಿದಂತೆ ನಿಷೇಧಿತ ವಸ್ತುಗಳನ್ನು ಬಳಸುತ್ತಿರುವುದು ದಾಳಿ ವೇಳೆ ಪತ್ತೆಯಾಗಿತ್ತು. ಇದಕ್ಕೆ ಸಿಬ್ಬಂದಿ ಹಾಗೂ ಅಧಿಕಾರಿಗಳ ಲೋಪವೇ ಕಾರಣ ಎಂಬುದು ಮೇಲ್ನೋಟಕ್ಕೆ ಗೊತ್ತಾಗಿದೆ ಎಂದು ಮೂಲಗಳು ತಿಳಿಸಿವೆ.

ಆಗ್ನೇಯ ವಿಭಾಗದ ಹುಳಿಮಾವು, ಬಂಡೆಪಾಳ್ಯ, ಬೇಗೂರು, ಎಲೆಕ್ಟ್ರಾನಿಕ್ ಸಿಟಿ ಹಾಗೂ ಪರಪ್ಪನ ಅಗ್ರಹಾರ ಠಾಣೆ ಇನ್‌ಸ್ಪೆಕ್ಟರ್‌ಗಳು ಮತ್ತು ಸಿಬ್ಬಂದಿ ಸೇರಿ 175 ಮಂದಿಯ ತಂಡ ದಾಳಿ ನಡೆಸಿತ್ತು. ಕೈದಿಗಳ ಬ್ಯಾರಕ್‌ಗಳಲ್ಲಿ ₹16 ಸಾವಿರ ನಗದು, ಒಂದು ಮೊಬೈಲ್, ಒಂದು ಇಂಡಕ್ಷನ್ ಸ್ಟೌ ಹಾಗೂ ನಾಲ್ಕು ಚಾಕುಗಳು ಪತ್ತೆಯಾಗಿದ್ದವು.

ADVERTISEMENT

ಜೈಲಿನ ಸಿಬ್ಬಂದಿ ಹಾಗೂ ಕೆಎಸ್‌ಐಎಸ್‌ಎಫ್ ಅಧಿಕಾರಿಗಳು ಕೈದಿಗಳೊಂದಿಗೆ ಶಾಮೀಲಾಗಿರುವ ಕಾರಣ ನಿಷೇಧಿತ ವಸ್ತುಗಳು ಬಳಕೆಯಾಗುತ್ತಿವೆ ಎಂದು ಪೊಲೀಸರು ಆರೋಪಿಸಿದ್ದಾರೆ.

ದಾಳಿ ಸಂಬಂಧ ಎಲೆಕ್ಟ್ರಾನಿಕ್‌ ಸಿಟಿ ಉಪ ವಿಭಾಗದ ಎಸಿಪಿ ಕೆ.ಎಂ.ಸತೀಶ್‌ ನೀಡಿರುವ ದೂರಿನ ಮೇರೆಗೆ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಜೈಲು ಸಿಬ್ಬಂದಿ ಹಾಗೂ ಕೆಎಸ್‌ಐಎಸ್‌ಎಫ್‌ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದಲ್ಲಿ ಕೈದಿಗಳಾದ ಚಲುವ, ಇರ್ಷಾದ್, ಆಕಾಶ್‌ ಹಾಗೂ ಮಾರುತಿ ಅವರನ್ನು ಸಹ ಆರೋಪಿಗಳನ್ನಾಗಿ ಪರಿಗಣಿಸಲಾಗಿದೆ.

ಜೈಲಿನಲ್ಲಿ ನಿಷೇಧಿತ ವಸ್ತುಗಳ ಬಳಕೆಗೆ ಜೈಲು ಅಧಿಕಾರಿಗಳು ಅವಕಾಶ ಕಲ್ಪಿಸಿರುವುದು ಕಾನೂನು ಬಾಹಿರ. ಈ ನಿಟ್ಟಿನಲ್ಲಿ ಅಧಿಕಾರಿಗಳ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ತನಿಖೆ ಚುರುಕುಗೊಂಡಿದ್ದು, ಕರ್ತವ್ಯಲೋಪವೆಸಗಿರುವ ಅಧಿಕಾರಿ, ಸಿಬ್ಬಂದಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಾಗುವುದು. ಕೈದಿಗಳಿಂದಲೂ ಮಾಹಿತಿ ಸಂಗ್ರಹಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಜೈಲಿನಲ್ಲಿ ಹೊಡೆದಾಟ ಪ್ರಕರಣ ದಾಖಲಾಗಿತ್ತು. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜೈಲಿನಲ್ಲಿ ಶೋಧ ನಡೆಸಲಾಗಿದೆ. ನಗದು, ಮೊಬೈಲ್ ಪತ್ತೆಯಾಗಿರುವ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ’ ಎಂದು ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.