ಬೆಂಗಳೂರು: ನಗರದಲ್ಲಿ ಓಮೈಕ್ರಾನ್ ಸೋಂಕಿನಿಂದ ಚೇತರಿಸಿಕೊಂಡಿದ್ದ ವೈದ್ಯನಿಗೆ ಪ್ರಾಥಮಿಕ ಪರೀಕ್ಷೆಯಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.
ದೇಶದಲ್ಲಿ ಮೊದಲ ಬಾರಿ ಓಮೈಕ್ರಾನ್ ಸೋಂಕು ಕಾಣಿಸಿಕೊಂಡಿದ್ದ ಕರ್ನಾಟಕ ಮೂಲದ ಇಬ್ಬರಲ್ಲಿ ಈ ವೈದ್ಯ ಒಬ್ಬರಾಗಿದ್ದಾರೆ. ಮತ್ತೊಬ್ಬರು ದಕ್ಷಿಣ ಆಫ್ರಿಕಾ ಮೂಲದವರಾಗಿದ್ದು, ಅವರು ಕ್ವಾರಂಟೈನ್ ನಿಯಮ ಉಲ್ಲಂಘಿಸಿ ದುಬೈಗೆ ತೆರಳಿದ್ದಾರೆ.
’ಓಮೈಕ್ರಾನ್ ಸೋಂಕಿಗೆ ತುತ್ತಾಗಿದ್ದ ವೈದ್ಯರನ್ನು ಕ್ವಾರಂಟೈನ್ ಅವಧಿ ಮುಗಿದ ಬಳಿಕ ಕೋವಿಡ್ ತಪಾಸಣೆಗೆ ಒಳಪಡಿಸಲಾಗಿತ್ತು. ಆದರೆ, ವರದಿ ಪಾಸಿಟಿವ್ ಬಂದಿದೆ‘ ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸೋಂಕು ಪತ್ತೆಯಾದಾಗಿನಿಂದ ವೈದ್ಯ ಪ್ರತ್ಯೇಕವಾಸದಲ್ಲಿದ್ದರು. ಆದರೆ, ಕ್ವಾರಂಟೈನ್ ನಿಯಮ ಉಲ್ಲಂಘಿಸಿ ವಿದೇಶಕ್ಕೆ ಪರಾರಿಯಾಗಿರುವ ದಕ್ಷಿಣ ಆಫ್ರಿಕಾ ಮೂಲದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಆರೋಗ್ಯ ಅಧಿಕಾರಿಗಳ ಗಮನಕ್ಕೆ ತರದೆ ಸೋಂಕಿತ ವ್ಯಕ್ತಿಯನ್ನು ಬಿಟ್ಟು ಕಳುಹಿಸಿರುವ ಹೋಟೆಲ್ನ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವಿರುದ್ಧವೂ ಐಪಿಸಿಯ ವಿವಿಧ ಸೆಕ್ಷನ್ಗಳು ಮತ್ತು ಕರ್ನಾಟಕ ಸಾಂಕ್ರಮಿಕ ರೋಗಗಳ ಕಾಯ್ದೆ 2020ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.