ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣ ಲೇಔಟ್ನ ಮೂರನೇ ಕ್ರಾಸ್ನ ಮನೆಯೊಂದರಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ನಾಲ್ವರು ಗಾಯಗೊಂಡಿದ್ದು, ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗೋಪಿ (49), ಶೀಲಾ (44), ರಮ್ಯಾ (28) ಹಾಗೂ ಅಭಿಷೇಕ್ (18) ಗಾಯಗೊಂಡವರು.
ಮನೆಯಲ್ಲಿ ಅಳವಡಿಸಿದ್ದ ಮೀಟರ್ ಬೋರ್ಡ್ನಲ್ಲಿ ಉಂಟಾದ ಶಾರ್ಟ್ ಸರ್ಕಿಟ್ನಿಂದ ಬೆಂಕಿ ಕಾಣಿಸಿಕೊಂಡಿತ್ತು. ಮೀಟರ್ ಸಮೀಪದಲ್ಲೇ ನಿಲುಗಡೆ ಮಾಡಿದ್ದ ಎರಡು ಎಲೆಕ್ಟ್ರಿಕ್ ಸ್ಕೂಟರ್ಗಳು ಬೆಂಕಿಗೆ ಆಹುತಿಯಾಗಿವೆ ಎಂದು ಪೊಲೀಸರು ಹೇಳಿದರು.
ಹೊಯ್ಸಳ ಸಿಬ್ಬಂದಿಯ ಸಾಹಸ: ಮೀಟರ್ ಬೋರ್ಡ್ ಬಳಿ ಕಾಣಿಸಿಕೊಂಡಿದ್ದ ಬೆಂಕಿಯನ್ನು ಗಮನಿಸಿದ್ದ ಸ್ಥಳೀಯರು ಹೊಯ್ಸಳ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಎಎಸ್ಐ ಸತೀಶ್ ಹಾಗೂ ಸಿಬ್ಬಂದಿ ಮಂಜು ಸ್ಥಳಕ್ಕೆ ತೆರಳಿ ಕೆಳಮಹಡಿಯಲ್ಲಿ ಸಿಲುಕಿಕೊಂಡಿದ್ದ ನಾಲ್ವರನ್ನು ಹೊರಕ್ಕೆ ಕರೆತರಲು ಯಶಸ್ವಿಯಾದರು. ಹೊಗೆಯಿಂದ ಅಸ್ವಸ್ಥಗೊಂಡಿದ್ದ ನಾಲ್ವರಿಗೆ ಜಯಶ್ರೀ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಯಿತು ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.