
ಅನಿಲ ಸೋರಿಕೆ
ಬೆಂಗಳೂರು: ಪೀಣ್ಯದ ಅಂದ್ರಹಳ್ಳಿಯ ಮನೆಯೊಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸಂಭವಿಸಿದ ಸ್ಫೋಟದಿಂದ ನಿವೃತ್ತ ಯೋಧರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಜನಾರ್ದನ್ (60) ಗಾಯಗೊಂಡವರು.
ಕೊಡಗು ಜಿಲ್ಲೆ ಮಡಿಕೇರಿ ನಗರದ ಜನಾರ್ದನ್ ಅವರು ಸೇನೆಯಲ್ಲಿ ಕೆಲಸ ಮಾಡಿ ನಿವೃತ್ತರಾದ ಬಳಿಕ ಅಂದ್ರಹಳ್ಳಿಯ ವಿದ್ಯಾಮಾನ ಬಡಾವಣೆಯ ರುದ್ರೇಗೌಡ ಅವರ ಬಾಡಿಗೆ ಮನೆಯಲ್ಲಿ ನೆಲಸಿದ್ದರು. ಸಿಲಿಂಡರ್ನಿಂದ ಅನಿಲ ಸೋರಿಕೆ ಆಗಿರುವುದು ಜನಾರ್ದನ್ ಅವರ ಗಮನಕ್ಕೆ ಬಂದಿರಲಿಲ್ಲ. ಶುಕ್ರವಾರ ರಾತ್ರಿ 8.30ರ ಸುಮಾರಿಗೆ ಅಡುಗೆ ಮಾಡಲು ಸ್ಟೌ ಹತ್ತಿಸಲು ಮುಂದಾಗಿದ್ದರು. ಆಗ ಬೆಂಕಿ ಹೊತ್ತಿಕೊಂಡಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಅನಿಲ ಸೋರಿಕೆಯಿಂದ ಸಂಭವಿಸಿದ ಸ್ಫೋಟದ ರಭಸಕ್ಕೆ ಗೋಡೆಗಳು ಬಿರುಕು ಬಿಟ್ಟಿವೆ. ಸ್ಫೋಟದ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದರು.
ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.