
ಬಂಧನ
(ಸಾಂದರ್ಭಿಕ ಚಿತ್ರ)
ಬೆಂಗಳೂರು: ಮನೆಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿಕೊಂಡು ಬಸ್, ರೈಲು ಹಾಗೂ ಆಟೊದಲ್ಲಿ ಪರಾರಿ ಆಗುತ್ತಿದ್ದ ಇಬ್ಬರು ಆರೋಪಿಗಳನ್ನು ಬೇಗೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಕೋಲಾರ ಜಿಲ್ಲೆಯ ಕೆಜಿಎಫ್ನ ಶಾಂತಕುಮಾರ್ ಹಾಗೂ ಜ್ಞಾನಪ್ರಕಾಶ್ ಬಂಧಿತರು.
ಬಂಧಿತರಿಂದ ₹72 ಲಕ್ಷ ಮೌಲ್ಯದ 614 ಗ್ರಾಂ ಚಿನ್ನ ಹಾಗೂ 470 ಬೆಳ್ಳಿಯ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.
ವಿಶ್ವಪ್ರಿಯ ಲೇಔಟ್ನ ನಿವಾಸಿಯೊಬ್ಬರ ಮನೆಯಲ್ಲಿ ಕಳ್ಳತನ ನಡೆದಿತ್ತು. ಅವರು ನೀಡಿದ ದೂರು ಆಧರಿಸಿ ಆರೋಪಿಗಳನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.
ಬೇಗೂರು ಕೆರೆ ಕೋಡಿಯ ಬಳಿ ಮನೆಯಲ್ಲಿ ಕಳ್ಳತನ ಮಾಡಲು ಹೊಂಚು ಹಾಕುತ್ತಿದ್ದ ವೇಳೆ, ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಯಿತು. ಕದ್ದ ಚಿನ್ನವನ್ನು ಚಿಂತಾಮಣಿ ಹಾಗೂ ಕೆಜಿಎಫ್ನಲ್ಲಿ ಮಾರಾಟ ಮಾಡಿದ್ದರು. ಅಲ್ಲಿಂದ ಚಿನ್ನವನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.
ಆರೋಪಿಗಳ ಬಂಧನದಿಂದ ಬೇಗೂರು ಠಾಣೆಯಲ್ಲಿ ದಾಖಲಾಗಿದ್ದ ಮೂರು, ಹೊಸಕೋಟೆ ಹಾಗೂ ಚಿಕ್ಕಬಳ್ಳಾಪುರ ಠಾಣೆಯಲ್ಲಿ ದಾಖಲಾಗಿದ್ದ ತಲಾ ಒಂದು ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.