ಬೆಂಗಳೂರು: ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಕಲಾಸಿಪಾಳ್ಯ ಬಸ್ ನಿಲ್ದಾಣ ಕೊನೆಗೂ ಉದ್ಘಾಟನೆಯಾಗುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಈ ನಿಲ್ದಾಣಕ್ಕೆ ಚಾಲನೆ ನೀಡುವರು.
ಸುಸಜ್ಜಿತ ಟಿಟಿಎಂಸಿ ನಿರ್ಮಾಣಕ್ಕೆ 2016ರ ಆಗಸ್ಟ್ನಲ್ಲಿ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದ್ದರು.
4.13 ಎಕರೆ ವಿಸ್ತೀರ್ಣದಲ್ಲಿ ₹63.17 ಕೋಟಿ ವೆಚ್ಚದಲ್ಲಿ ನಿಲ್ದಾಣ ನಿರ್ಮಾಣವಾಗಿದೆ.
ಕಾಮಗಾರಿ ಪೂರ್ಣಗೊಳಿಸಲು 24 ತಿಂಗಳ ಕಾಲಮಿತಿ ನೀಡಲಾಗಿತ್ತು. ಅದರಂತೆ 2018ರ ಆಗಸ್ಟ್ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಬೇಕಿತ್ತು. ಅನುದಾನ ಬಿಡುಗಡೆ ವಿಳಂಬದಿಂದ ಕಾಮಗಾರಿ ವಿಳಂಬವಾಯಿತು. ಬಳಿಕ 2019ರ ಡಿಸೆಂಬರ್ಗೆ ಎರಡನೇ ಕಾಲಮಿತಿ ನೀಡಲಾಗಿತ್ತು. ಅನುದಾನ ಬಿಡುಗಡೆಯಾಗುವಷ್ಟರಲ್ಲಿ ಕೋವಿಡ್ ಲಾಕ್ಡೌನ್ ಜಾರಿಯಾಯಿತು. ಬಳಿಕ ಕಾರ್ಮಿಕರ ಕೊರತೆಯಿಂದಾಗಿ ಈ ಕಾಮಗಾರಿಯೂ ಸ್ಥಗಿತಗೊಂಡಿತ್ತು. ಜನ ಜೀವನ ಸಹಜ ಸ್ಥಿತಿಗೆ ಬಂದ ಬಳಿಕ ಕಾಮಗಾರಿ ಆರಂಭವಾಗಿತ್ತು.
ಈಗ ಕಾಮಗಾರಿ ಪೂರ್ಣಗೊಂಡು ಹಲವು ತಿಂಗಳುಗಳೇ ಕಳೆದಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದಲೇ ಉದ್ಘಾಟನೆ ಮಾಡಿಸಲು ಅಧಿಕಾರಿಗಳು ಕಾದಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.