ಬೆಂಗಳೂರು: ‘ನಮ್ಮ ಮೆಟ್ರೊ‘ ಎರಡನೇ ಹಂತದಲ್ಲಿನ ಹೊರವರ್ತುಲ ರಸ್ತೆಯಲ್ಲಿ (ಒಆರ್ಆರ್) ಮೆಟ್ರೊ ಮಾರ್ಗ ನಿರ್ಮಾಣಕ್ಕಾಗಿ 833 ಮರಗಳನ್ನು ಕಡಿಯಲು ಬೆಂಗಳೂರು ಮೆಟ್ರೊ ರೈಲು ನಿಗಮಕ್ಕೆ (ಬಿಎಂಆರ್ಸಿಎಲ್) ಬಿಬಿಎಂಪಿ ಅನುಮತಿ ನೀಡಿದೆ. ಈ ಕುರಿತು ಗುರುವಾರ ಸುತ್ತೋಲೆ ಹೊರಡಿಸಿದೆ.
ಸೆಂಟ್ರಲ್ ಸಿಲ್ಕ್ಬೋರ್ಡ್ನಿಂದ ಕಾಡುಬೀಸನಹಳ್ಳಿಯವರೆಗೆ ಮೆಟ್ರೊ ಮಾರ್ಗ ನಿರ್ಮಿಸಲು ಈ ಮರಗಳು ಅಡ್ಡಿಯಾಗಿವೆ. ರಸ್ತೆಯ ಮಧ್ಯಭಾಗದಲ್ಲಿ (ಮೀಡಿಯನ್) ಈ ಮರಗಳಿದ್ದು, ಕಡಿಯುವುದು ಅನಿವಾರ್ಯವಾಗಿದೆ. ಈ ಸಂಬಂಧ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಬಹುದು. ಜುಲೈ 4ರೊಳಗೆ ಈ ಆಕ್ಷೇಪಣೆಗಳನ್ನು ಸಲ್ಲಿಸಬೇಕು ಎಂದು ಬಿಬಿಎಂಪಿ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಚ್.ಎಸ್. ರಂಗನಾಥ ಸ್ವಾಮಿ ‘ಪ್ರಜಾವಾಣಿ‘ಗೆ ತಿಳಿಸಿದರು.
‘ಮೀಡಿಯನ್ನಲ್ಲಿರುವ ಈ ಮರಗಳು ತೀರಾ ದೊಡ್ಡವಲ್ಲ. ಸ್ಥಳಾಂತರಿಸಬೇಕೆಂದರೆ ಬೇರುಗಳು ಕೂಡ ಅಷ್ಟು ಆಳವಾಗಿ ಬೆಳೆದಿಲ್ಲ. ಮರಗಳನ್ನು ಕಡಿಯಲೇಬೇಕಾಗಿದೆ. ನ್ಯಾಯಾಲಯದ ಆದೇಶದಂತೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ನಿಗಮವು ಒಂದು ಮರಕ್ಕೆ 10 ಸಸಿಗಳನ್ನು ನೆಟ್ಟು ಪೋಷಿಸಬೇಕು ಎಂದೂ ನ್ಯಾಯಾಲಯ ಹೇಳಿದೆ’ ಎಂದು ಅವರು ತಿಳಿಸಿದರು.
ಅವಧಿ ವಿಸ್ತರಣೆ:
ಸಿಂಗನಾಯಕನಹಳ್ಳಿ ಕೆರೆ ಅಭಿವೃದ್ಧಿಗೆ 6,316 ಮರಗಳನ್ನು ಕಡಿಯುವುದಕ್ಕೆ ಮುಂದಾಗಿರುವ ಅರಣ್ಯ ಇಲಾಖೆಯ ಕ್ರಮಕ್ಕೆ ಪರಿಸರವಾದಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಹಲವು ಸಂಘ–ಸಂಸ್ಥೆಗಳು ಆಕ್ಷೇಪಣೆ ಸಲ್ಲಿಕೆ ಅವಧಿಯನ್ನು ವಿಸ್ತರಿಸುವಂತೆಯೂ ಒತ್ತಾಯಿಸಿದ್ದವು.
ಜೂನ್ 14ಕ್ಕೆ ಈ ಕುರಿತು ಸುತ್ತೋಲೆ ಹೊರಡಿಸಿದ್ದ ಇಲಾಖೆಯು, ಆಕ್ಷೇಪಣೆ ಸಲ್ಲಿಕೆಗೆ 10 ದಿನಗಳ ಕಾಲಾವಕಾಶ ನೀಡಿತ್ತು. ಈಗ, 20 ದಿನಗಳಿಗೆ ವಿಸ್ತರಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.