ADVERTISEMENT

ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ ವೇ: ದ್ವಿಚಕ್ರ ವಾಹನಗಳ ನಿರ್ಬಂಧಕ್ಕೆ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 6 ಜುಲೈ 2023, 7:30 IST
Last Updated 6 ಜುಲೈ 2023, 7:30 IST
ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ ವೇ
ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ ವೇ   

ಬೆಂಗಳೂರು: ‘ಬೆಂಗಳೂರು– ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳನ್ನು ನಿರ್ಬಂಧಿಸುವ ಪ್ರಸ್ತಾವ ಕುರಿತು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಪರಿಶೀಲನೆ ನಡೆಸುತ್ತಿದೆ’ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ಬುಧವಾರ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್‌ನ ಮರಿತಿಬ್ಬೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ‘ಅತಿಯಾದ ವೇಗದಿಂದ ಈ ಹೆದ್ದಾರಿಯಲ್ಲಿ ಅಪಘಾತಗಳು ಸಂಭವಿಸುತ್ತಿವೆ. ಲೇನ್‌ ಶಿಸ್ತಿನ ಕೊರತೆ ಮತ್ತು ನಿಗದಿತ ವೇಗದ ಮಿತಿಯಾದ ಪ್ರತಿ ಗಂಟೆಗೆ 100 ಕಿ.ಮೀ. ಮೀರುವ ವಾಹನಗಳು ಅಪಘಾತಕ್ಕೆ ಪ್ರಮುಖ ಕಾರಣವಾಗಿವೆ. ವಾಹನ ಸವಾರರಿಗೆ ವೇಗದ ಮಿತಿ ಬಗ್ಗೆ ಅರಿವು ಮೂಡಿಸುವ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ’ ಎಂದು ವಿವರಿಸಿದರು.

‘ಈ ರಸ್ತೆ ವೈಜ್ಞಾನಿಕವಾಗಿ ನಿರ್ಮಿಸಿಲ್ಲ. ಹೆದ್ದಾರಿಯಲ್ಲಿನ ಸಮಸ್ಯೆಗಳ ಕುರಿತು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ(ಎನ್‌ಎಚ್‌ಎಐ) ಅಧಿಕಾರಿಗಳ ಜತೆ ಚರ್ಚಿಸಲಾಗುವುದು’ ಎಂದರು.

ADVERTISEMENT

ಮರಿತಿಬ್ಬೇಗೌಡ ಮಾತನಾಡಿ, ‘ಬೆಂಗಳೂರು– ಮೈಸೂರು ಎಕ್ಸ್‌ಪ್ರೆಸ್‌ ವೇ ರಾಷ್ಟ್ರೀಯ ಹೆದ್ದಾರಿ ಅಲ್ಲ, ಸಾವಿನ ದಾರಿಯಾಗಿದೆ. ಕೇವಲ ಆರು ತಿಂಗಳಲ್ಲಿ 512 ಅಪಘಾತಗಳು ಸಂಭವಿಸಿವೆ’ ಎಂದು ಕಳವಳ ವ್ಯಕ್ತಪಡಿಸಿದರು.

‘ಪ್ರತಿ ನಿತ್ಯ ಅಪಘಾತಗಳು ಸಂಭವಿಸುತ್ತಿದ್ದರೂ ನಿಯಂತ್ರಣಕ್ಕೆ ಕ್ರಮಕೈಗೊಂಡಿಲ್ಲ. ಹೆದ್ದಾರಿಯಲ್ಲಿ ಕಳ್ಳತನಗಳು ನಡೆಯುತ್ತಿವೆ. ಹೀಗಾಗಿ, ಹೆದ್ದಾರಿಯಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.