ಜೈಲು (ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ಪಾದಚಾರಿಯ ಸಾವಿಗೆ ಕಾರಣನಾಗಿದ್ದ ಬೈಕ್ ಸವಾರನಿಗೆ ಒಂದನೇ ಜೆಎಂಎಫ್ಸಿ ನ್ಯಾಯಾಲಯವು 30 ದಿನ ಜೈಲು ಶಿಕ್ಷೆ ಹಾಗೂ ಒಂದು ಸಾವಿರ ರೂಪಾಯಿ ದಂಡ ವಿಧಿಸಿ ಆದೇಶಿಸಿದೆ.
ಧರ್ಮನ್ (39) ಶಿಕ್ಷೆಗೆ ಒಳಗಾದ ಸವಾರ. ಬೈಕ್ ಸವಾರ ದಂಡ ಪಾವತಿಸಲು ವಿಫಲನಾದರೆ ಹೆಚ್ಚುವರಿಯಾಗಿ 15 ದಿನ ಸಾದಾ ಸಜೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ.
ಸಂಚಾರ ಪೂರ್ವ ವಿಭಾಗದ ಎಚ್ಎಎಲ್ ಏರ್ಪೋರ್ಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಹೊರವರ್ತುಲ ರಸ್ತೆಯ ದೇವರಬೀಸನಹಳ್ಳಿ ಕಂಟ್ರಿ ಕ್ಲಬ್ ಬಸ್ನಿಲ್ದಾಣದ ಬಳಿ 2020ರ ಆಗಸ್ಟ್ 23ರಂದು ಸಂಭವಿಸಿದ ಅಪಘಾತದಲ್ಲಿ ಪಾದಚಾರಿ ನಾರಾಯಣ್ (59) ಎಂಬುವರು ಮೃತಪಟ್ಟಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಸಂಚಾರ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದರು.
ಸವಾರ ಬೆಳ್ಳಂದೂರು ಕಡೆಯಿಂದ ಕಾಡುಬೀಸನಹಳ್ಳಿ ಕಡೆಗೆ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ. ಅದೇ ವೇಳೆ ರಸ್ತೆ ದಾಟುತ್ತಿದ್ದ ನಾರಾಯಣ ಅವರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುವನ್ನು ಸಂಜಯಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದರು.
ಬೈಕ್ ಸವಾರ ಧರ್ಮನ್, ಅತಿವೇಗ ಹಾಗೂ ಅಜಾಗರೂಕತೆಯ ಚಾಲನೆಯಿಂದ ಅಪಘಾತ ನಡೆದಿದ್ದು ಸಂಚಾರ ಪೊಲೀಸರ ತನಿಖೆಯಿಂದ ಗೊತ್ತಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.