ADVERTISEMENT

ಟೀಕಿಸುವವರಿಂದ ಬೆಂಗಳೂರಿಗೆ, ರಾಜ್ಯಕ್ಕೆ ಅನ್ಯಾಯ: ಡಿ.ಕೆ.ಶಿವಕುಮಾರ್

ರಸ್ತೆಗುಂಡಿ ಕುರಿತ ಕಿರಣ್‌ ಮಜುಂದಾರ್ ಶಾ ಪೋಸ್ಟ್‌ಗೆ ಉಪ ಮುಖ್ಯಮಂತ್ರಿ ತೀವ್ರ ಅಸಮಾಧಾನ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2025, 11:08 IST
Last Updated 15 ಅಕ್ಟೋಬರ್ 2025, 11:08 IST
ಡಿ.ಕೆ. ಶಿವಕುಮಾರ್
ಡಿ.ಕೆ. ಶಿವಕುಮಾರ್   

ಬೆಂಗಳೂರು: ‘ಬೆಂಗಳೂರನ್ನು ಈಗ ಟೀಕಿಸುತ್ತಿರುವ ಉದ್ಯಮಿಗಳು ಆ ಮೂಲಕ ತಮಗೆ ತಾವೇ, ಈ ನಗರಕ್ಕೆ ಮತ್ತು ಈ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದ್ದಾರೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಟೀಕಿಸಿದರು.

ಬೆಂಗಳೂರಿನಲ್ಲಿನ ಮೂಲಸೌಕರ್ಯಗಳ ಕೊರತೆ ಬಗ್ಗೆ ಉದ್ಯಮಿ ಕಿರಣ್‌ ಮಜುಂದಾರ್ ಶಾ ಅವರು ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ, ಶಿವಕುಮಾರ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

‘ಅವರು ‘ಎಕ್ಸ್‌’ ಮಾಡುವ ಮೂಲಕ, ಅವರಿಗೆ ನೆರವಾಗಿರುವ ದೇಶ ಮತ್ತು ರಾಜ್ಯಕ್ಕೆ ಧಕ್ಕೆ ತರುತ್ತಿದ್ದಾರೆ. 25 ವರ್ಷಗಳ ಹಿಂದೆ ಅವರು ಎಲ್ಲಿದ್ದರು? ಅವರ ಬೆಳವಣಿಗೆಯಲ್ಲಿ ಹೆಚ್ಚಿನ ಕೊಡುಗೆ ಇರುವುದು ಬೆಂಗಳೂರಿನದ್ದು. ಈ ನರವು ಲಕ್ಷಾಂತರ ಮಂದಿಗೆ ಉದ್ಯೋಗ ನೀಡಿ, ಉದ್ಯಮಿಗಳನ್ನು ದೊಡ್ಡಮಟ್ಟಕ್ಕೆ ಬೆಳೆಸಿದೆ. ಈಗ ಈ ನಗರವನ್ನು ಟೀಕಿಸುತ್ತಿರುವವರು, ಇಲ್ಲಿನ ಸರ್ಕಾರಗಳು ಎಷ್ಟು ಜಾಗ ನೀಡಿವೆ ಮತ್ತು ಎಷ್ಟು ನೆರವು ನೀಡಿವೆ ಎಂಬುದನ್ನು ಸ್ಮರಿಸಿಕೊಳ್ಳಬೇಕು’ ಎಂದರು.

ADVERTISEMENT

‘ರಸ್ತೆ ಗುಂಡಿ ಮುಚ್ಚಲು ಗರಿಷ್ಠ ಪ್ರಮಾಣದಲ್ಲಿ ಕೆಲಸ ಮಾಡುತ್ತಿದ್ದೇವೆ. ಎಲ್ಲರೂ ಸ್ವಲ್ಪ ತಾಳ್ಮೆಯಿಂದ ಇರಬೇಕು. ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಬೆದರಿಸುವುದೇ ನಿಮಗೆ ಮುಖ್ಯವಾದರೆ, ಅದನ್ನೇ ಮಾಡಿ. ನಾನು ಯಾರನ್ನೂ ಪ್ರಶ್ನಿಸುವುದಿಲ್ಲ, ಟೀಕಿಸುವುದಿಲ್ಲ. ಪ್ರಧಾನಿಯೇ ಬೆಂಗಳೂರನ್ನು ಹೊಗಳಿದ್ದಾರೆ. ಆದರೆ ಇವರು ಪ್ರಧಾನಿ ಮಾತಿಗೆ ತದ್ವಿರುದ್ಧವಾಗಿ ಮಾತನಾಡುತ್ತಿದ್ದಾರೆ. ಇವರಿಗೆ ಏನು ಹೇಳುವುದು’ ಎಂದು ಪ್ರಶ್ನಿಸಿದರು.

‘ಬೆಂಗಳೂರಿನಿಂದ ಇಷ್ಟೆಲ್ಲಾ ಪಡೆದುಕೊಂಡಿರುವ ಈ ಕಂಪನಿಗಳು, ತಮ್ಮ ಸಿಎಸ್‌ಆರ್‌ ನಿಧಿಯನ್ನು ಏನು ಮಾಡುತ್ತಿವೆ? ಎಲ್ಲಿ ವೆಚ್ಚ ಮಾಡುತ್ತಿವೆ? ರಸ್ತೆ ವಿಸ್ತರಣೆಗೆ ಇವರು ತಮ್ಮ ಜಾಗ ಕೊಡುತ್ತಾರಾ? ಯಾರೊಬ್ಬರೂ ನೀಡುವುದಿಲ್ಲ. ಎಲ್ಲದಕ್ಕೂ ತನ್ನದೇ ಆದ ಇತಿಮಿತಿಗಳಿರುತ್ತವೆ. ಅವರು ಎಲ್ಲಿ ಬೆಳೆದಿದ್ದಾರೆ, ಎಲ್ಲಿ ಕೆಲಸ ಮಾಡಿದ್ದಾರೆ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮಾರ್ಕೆಂಟಿಗ್‌ಗಾಗಿ ಬೆಂಗಳೂರಿನ ಹೆಸರು ಬಳಕೆ

‘ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ. ಆಂಧ್ರಪ್ರದೇಶದ ಮಾಹಿತಿ ತಂತ್ರಜ್ಞಾನ ಸಚಿವ ನಾರಾ ಲೋಕೇಶ್ ಸಹ ಇದನ್ನೇ ಮಾಡುತ್ತಿದ್ದಾರೆ’ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

‘ಬೆಂಗಳೂರಿನಲ್ಲಿ 25 ಲಕ್ಷ ಐಟಿ ವೃತ್ತಿಪರರು, 2 ಲಕ್ಷ ವಿದೇಶಿಯರು ಕೆಲಸ ಮಾಡುತ್ತಿದ್ದಾರೆ. ದೇಶದ ಪ್ರಗತಿಯಲ್ಲಿ ಬೆಂಗಳೂರಿನ ಕೊಡುಗೆ ಅಪಾರ. ಕೇಂದ್ರ ಸರ್ಕಾರಕ್ಕೆ ಸುಮಾರು ಶೇ 40 ತೆರಿಗೆ ಆದಾಯ ಇಲ್ಲಿಂದಲೇ ಹೋಗುತ್ತಿದೆ. ಅವರು ತಮ್ಮ ಬಗ್ಗೆ ಮಾರ್ಕೆಟಿಂಗ್ ಮಾಡಿಕೊಳ್ಳಲು ಮಾತನಾಡುತ್ತಾರೆ. ಅವರು ಏನಾದರೂ ಮಾಡಿಕೊಳ್ಳಲಿ. ಅವರಿಗೆ ಕೇಂದ್ರ ಸರ್ಕಾರವೂ ಸಹಾಯ ಮಾಡಲಿ. ಆದರೆ ಬೆಂಗಳೂರಿಗೆ ಸರಿಸಮನಾಗಲು ಸಾಧ್ಯವಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.