ಬೆಂಗಳೂರು: ನಗರದಲ್ಲಿ ಗುರುವಾರ ಸಂಜೆ ಜೋರು ಮಳೆ ಆಗಿದ್ದು, ಯಶವಂತಪುರ ಸೇರಿದಂತೆ ಹಲವೆಡೆ ಮರಗಳು ಉರುಳಿ ಬಿದ್ದಿದ್ದವು.
ಬೆಳಿಗ್ಗೆಯಿಂದಲೇ ನಗರದಲ್ಲಿ ಮೋಡ ಕವಿದ ವಾತಾವರಣವಿತ್ತು. ಆಗಾಗ ಬಿಸಿಲು ಕಾಣಿಸಿಕೊಂಡಿತ್ತು. ಸಂಜೆ ವೇಳೆ ಜೋರಾಗಿ ಆರಂಭವಾದ ಮಳೆ, 15 ನಿಮಿಷಕ್ಕೂ ಹೆಚ್ಚು ಸಮಯ ಸುರಿಯಿತು.
ಯಶವಂತಪುರದಿಂದ ಮೇಖ್ರಿ ವೃತ್ತದ ಕಡೆಗೆ ಹೋಗುವ ರಸ್ತೆಯಲ್ಲಿರುವ ಬೃಹತ್ ಮರವೊಂದು ಉರುಳಿಬಿದ್ದಿತ್ತು. ಬಿಬಿಎಂಪಿ ಸಿಬ್ಬಂದಿ ಹಾಗೂ ಪೊಲೀಸರು ಮರ ತೆರವು ಮಾಡಿದರು.
ರಾಜಾಜಿನಗರ, ಬಸವೇಶ್ವರನಗರ, ಆರ್.ಟಿ.ನಗರ, ಮಹಾಲಕ್ಷ್ಮಿ ಲೇಔಟ್, ಮೆಜೆಸ್ಟಿಕ್, ಶಿವಾಜಿನಗರ, ಅಶೋಕನಗರ, ಚಾಮರಾಜಪೇಟೆ, ವಿಜಯನಗರ, ಪೀಣ್ಯ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆಯಾಯಿತು. ‘ಮರ ಹಾಗೂ ಕೊಂಬೆಗಳು ಬಿದ್ದ ಬಗ್ಗೆ ದೂರುಗಳು ಬಂದಿದ್ದವು. ಸಿಬ್ಬಂದಿ ತೆರವು ಕಾರ್ಯಾಚರಣೆ ಆರಂಭಿಸಿದ್ದಾರೆ’ ಎಂದು ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.